ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಶಾಸಕರಿಗೆ ನಿಗಮ–ಮಂಡಳಿ ಅಧ್ಯಕ್ಷ ಸ್ಥಾನವನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಕುಟುಕಿದ್ದಾರೆ.
ಈ ಸಂಬಂಧ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ‘ಜನರು ಬದುಕಿಗಾಗಿ ಹೋರಾಟ ಮಾಡುತ್ತಿದ್ದರೆ, ಕುರ್ಚಿ ಉಳಿಸಿಕೊಳ್ಳುವ ಕಸರತ್ತಿನಲ್ಲಿ ಬಿಜೆಪಿ ಸರ್ಕಾರ ತನ್ಮಯವಾಗಿದೆ. ಶಾಸಕರಿಗೆ ಅಧ್ಯಕ್ಷ ಸ್ಥಾನಗಳ ಉಡುಗೊರೆ ನೀಡುವ ಮೂಲಕ ಜನರ ಆಶೋತ್ತರಗಳಿಗೆ ಕೊಳ್ಳಿ ಇಟ್ಟಿದೆ’ ಎಂದು ಟೀಕಿಸಿದ್ದಾರೆ.
‘ಸರ್ಕಾರ ಮತ್ತು ಜನರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವಾಗ ಬೊಕ್ಕಸ ಹಾಗೂ ಜನಸಾಮಾನ್ಯನ ಮೇಲೆ ಹೊರೆ ಹಾಕುವ ಮೂಲಕ ಶಾಸಕರಿಗೆ ಉಡುಗೊರೆ, ಜನರಿಗೆ ಬರೆ ಎಳೆಯುವ ಬಿಜೆಪಿ ಸರ್ಕಾರದ ನಿರ್ಲಜ್ಜ ನಡವಳಿಕೆ ಖಂಡನೀಯ’ ಎಂದು ಹೇಳಿದ್ದಾರೆ.
‘ಬಿಜೆಪಿ ಸರ್ಕಾರಕ್ಕೆ ಸಾಮಾನ್ಯರ ಹಿತ ಮುಖ್ಯವೋ? ಕುರ್ಚಿ ಉಳಿಸಿಕೊಳ್ಳಲು ಶಾಸಕರ ಹಿತ ಮುಖ್ಯವೋ? ರಾಜ್ಯದ ಜನತೆಗೆ ಉಡುಗೊರೆ ಕೊಡಬೇಕಾಗಿದ್ದ ಸರ್ಕಾರ ಶಾಸಕರ ತೃಪ್ತಿಪಡಿಸುವ ಅನಾಚಾರ ಪ್ರದರ್ಶಿಸಿದೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
‘ರಾಜ್ಯ ಎದುರಿಸುತ್ತಿರುವ ಇಂತಹ ಸಂಕಷ್ಟದ ಸಮಯದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಗಾದಿಯ ಮೇಲೆ ಸವಾರಿ ಮಾಡುವುದು ವಿಹಿತವೇ ಎಂಬುದನ್ನು ಶಾಸಕರು ತಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಬೇಕು’ ಎಂದು ಎಂದಿದ್ದಾರೆ.