ಬೆಂಗಳೂರು: ಮುಜರಾಯಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್ ಸಿ ಮತ್ತು ಡಿ ವೃಂದದ ಸಿಬ್ಬಂದಿ ಹಾಗೂ ಅರ್ಚಕರನ್ನು 'ಜನಧನ್' ಯೋಜನೆಯಡಿ ನೋಂದಾಯಿಸಿ, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ದೊರಕಿಸಿಕೊಡಬೇಕು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.
'ಇಲಾಖೆ ವ್ಯಾಪ್ತಿಯ ದೇವಾಲಯಗಳ ಸಿಬ್ಬಂದಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯಡಿ ಸೇವೆ ಸಲ್ಲಿಸುತ್ತಿರುವ ಅರ್ಚಕರಿಗೆ ಅನಿರೀಕ್ಷಿತವಾಗಿ ಅಪಘಾತಗಳು ಸಂಭವಿಸಿದಲ್ಲಿ, ಅವರ ಅವಲಂಬಿತ ಕುಟುಂಬಕ್ಕೆ ಆರ್ಥಿಕ ಭದ್ರತೆ ಒದಗಿಸಲು ಕ್ರಮಕೈಗೊಳ್ಳಿ‘ ಎಂದು ಇಲಾಖೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.
'ಜನಧನ್ ಯೋಜನೆಯಡಿ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಜ್ಯೋತಿ ಬಿಮಾ ಯೋಜನೆ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ನ ಗ್ರೂಪ್ ಪರ್ಸನಲ್ ಆಕ್ಸಿಡೆಂಟ್ ವಿಮಾ ಯೋಜನೆಗಳಡಿ ನೋಂದಾಯಿಸಲು ಕ್ರಮವಹಿಸಿ' ಎಂದು ಸೂಚಿಸಿದ್ದಾರೆ.