ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗ ದಲ್ಲಿ ಉತ್ತಮ ಮಳೆ ಆಗಿದೆ. ಹಳ್ಳಗಳು, ಚೆಕ್ಡ್ಯಾಂ, ಕೃಷಿ ಹೊಂಡಗಳು ಭರ್ತಿ ಯಾಗಿವೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಬನ್ನಟ್ಟಿ ಗ್ರಾಮದ ಬಳಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಶುಕ್ರವಾರ ಸುರಿದ ಮಳೆಗೆ ಕೊಚ್ಚಿ ಹೋಗಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಹಾಲೇಹಳ್ಳಿ ಸಮೀಪದ ಸೇತುವೆ ಹಾಗೂ ರಸ್ತೆ ಹಳ್ಳದಲ್ಲಿ ಕೊಚ್ಚಿಹೋಗಿವೆ.
ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಸುರಿದ ಭಾರಿ ಮಳೆಗೆ ಅಲೆಮಾರಿ ಬುಡ್ಗ ಜಂಗಮ ಕಾಲೊನಿಯ 80 ಗುಡಿಸಲುಗಳಿಗೆ ಹಾನಿಯಾಗಿದೆ. ಬುಡ್ಗ ಜಂಗಮ ಕಾಲೊನಿ, ಆಜಾದ್ ನಗರ, ಶಾದಿ ಮಹಲ್ ಬಡಾವಣೆಯ ಮನೆಗಳಿಗೆ ನೀರು ನುಗ್ಗಿದೆ. ಹೊಸಪೇಟೆಯ ವೇಣು ಗೋಪಾಲ ದೇವಸ್ಥಾನದ ಆವರಣಕ್ಕೆ ನೀರು ನುಗ್ಗಿತ್ತು. ಕೂಡ್ಲಿಗಿ ತಾಲ್ಲೂಕಿನ ಶ್ರೀಕಂಠಾಪುರ ತಾಂಡದಲ್ಲಿ 14 ಕುರಿಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಗುಡೇಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಒಂದು ಎತ್ತು, ಒಂದು ಹಸು, ಎಂಟು ಕುರಿ ಹಾಗೂ 54 ಕೋಳಿಗಳು ಸತ್ತಿವೆ.
ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಇದೇ 26ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.