ಬೆಂಗಳೂರು: ಕರಾವಳಿ ಜಿಲ್ಲೆಗಳು, ಕೊಡಗು, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ವಿಜಯಪುರದಲ್ಲಿ ಡೋಣಿ ನದಿ ಮೈದುಂಬಿಕೊಂಡಿದ್ದು, ಸೇತುವೆಯೊಂದು ಜಲಾವೃತವಾಗಿದೆ. ಗೋಕರ್ಣದ ತಗ್ಗುಪ್ರದೇಶಗಳಲ್ಲಿ ನೀರು ನಿಂತು, ಜನಜೀವನ ಅಸ್ತವ್ಯಸ್ತವಾಗಿದೆ.
ಕರಾವಳಿಯಲ್ಲಿ ಶುಕ್ರವಾರ ಮಳೆ ಬಿರುಸಾಗಿದ್ದು, ಮಲೆನಾಡಿನಲ್ಲಿ ತುಂತುರು ಮಳೆಯಾಗಿದೆ. ಮಂಗಳೂರು ತಾಲ್ಲೂಕಿನ ಮಿತ್ತಕೋಡಿ ಬಳಿ ರಸ್ತೆ ಬದಿಯಲ್ಲಿದ್ದ ಗುಡ್ಡ ಕುಸಿದಿದ್ದು, ಕೆಲಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು.
ಉಡುಪಿ ಜಿಲ್ಲೆಯ ಹೆಬ್ರಿ, ಬೈಂದೂರು, ಹಿರಿಯಡಕದಲ್ಲಿ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಗಿರಿ ಶ್ರೇಣಿ, ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಕಳಸ ಭಾಗದಲ್ಲಿ ದಿನವಿಡೀ ಸಾಧಾರಣ ಮಳೆಯಾಗಿದೆ.
ಬೆಳಗಾವಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.ಗೋಕರ್ಣದ ರಥಬೀದಿಯಲ್ಲಿ ಮೂರು ಅಡಿಗಿಂತ ಹೆಚ್ಚು ನೀರು ನಿಂತಿತ್ತು. ರುದ್ರಪಾದ, ಬಿಜ್ಜೂರು ಕಡೆ ಮನೆಗಳು ಜಲಾವೃತವಾದವು. ಹೊನ್ನಾವರ, ಕುಮಟಾ, ಶಿರಸಿಯಲ್ಲಿ ದಿನವಿಡೀ ಆಗಾಗ ಮಳೆಯಾಗಿದೆ.
ಬೆಳಗಾವಿ ನಗರ ಸೇರಿ ಜಿಲ್ಲೆಯ ವಿವಿಧೆಡೆ, ಗದಗದ ಡಂಬಳದಲ್ಲಿ ಕೆಲಕಾಲ ಮಳೆಯಾಗಿದೆ. ತಾಳಿಕೋಟೆಯ ಡೋಣಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು, ಡೋಣಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಹಡಗಿ ನಾಳ ಮಾರ್ಗದಲ್ಲಿ ಸೇತುವೆ ಜಲಾವೃತವಾಗಿದೆ ಸಂಚಾರಕ್ಕೆ ತೊಂದರೆಯಾಗಿದೆ.
ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ನಿರಂತರ ಮಳೆಯಾಗಿದೆ. ನಾಪೋಕ್ಲು, ಭಾಗಮಂಡಲ, ತಲ ಕಾವೇರಿ, ಚೇರಂಬಾಣೆ, ಪೊನ್ನಂಪೇಟೆ, ಶ್ರೀಮಂಗಲ, ಕರಿಕೆ ವ್ಯಾಪ್ತಿಯಲ್ಲಿ ಜೋರು ಮಳೆಯಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದೆ.