ಬಳ್ಳಾರಿ: ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್ (81) ನಗರದಲ್ಲಿ ಬುಧವಾರ ಮಧ್ಯರಾತ್ರಿ ನಿಧನರಾದರು.
ನಗರ ರೇಡಿಯೋಪಾರ್ಕ್ ಪ್ರದೇಶದ ಮನೆಯಲ್ಲಿ ರಾತ್ರಿ 11.30ರವೇಳೆಗೆ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಅವರನ್ನು ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದರು.
ಅವರು ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಅವರ ಪತಿ ಲಿಂಗರಾಜ ಮನ್ಸೂರ್ ಹಲವು ವರ್ಷಗಳ ಹಿಂದೇ ಮೃತಪಟ್ಟಿದ್ದರು.
ಅವರು ನಾಡೋಜ, ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಯಲಯದ ಗೌರವ ಡಾಕ್ಟರೇಟ್, ರಾಜ್ಯೋತ್ಸವ, ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು.
ಹಿರಿಯ ರಂಗಭೂಮಿ ಕಲಾವಿದೆ ಶ್ರೀಮತಿ ಸುಭದ್ರಮ್ಮ ಮನ್ಸೂರ್ ನಿಧನರಾದ ಸುದ್ದಿ ಅತೀವ ದುಃಖ ತಂದಿದೆ. ಸುಮಾರು 5 ದಶಕಗಳ ಕಾಲ ರಂಗಭೂಮಿಯಲ್ಲಿ ಕಲಾವಿದರಾಗಿ ಮತ್ತು ಸಂಗೀತಗಾರರಾಗಿ ಅವರ ಸಾಧನೆ ಅನುಪಮವಾದದ್ದು. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ, ಕುಟುಂಬದವರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ.