ನವದೆಹಲಿ: ವಿಶ್ವದಲ್ಲೇ ಅತ್ಯಂತ ಬೃಹತ್ ಆರೋಗ್ಯ ಯೋಜನೆಯಾದ ಆಯುಷ್ಮಾನ್ ಭಾರತ್ ಯೋಜನೆಗೆ ಈ ಬಾರಿ ಬಜೆಟ್ನಲ್ಲಿ ಕೇಂದ್ರ ಸರ್ಕಾರ ₹8 ಸಾವಿರ ಕೋಟಿ ಅನುದಾನ ಮೀಸಲಿಟ್ಟಿದೆ.
ಈ ಯೋಜನೆಯಡಿ ಫಲಾನುಭವಿಗಳಾದ 10.74 ಕೋಟಿ ಬಡ ಕುಟುಂಬಗಳಿಗೆ ತಲಾ ₹5 ಲಕ್ಷ ಆರೋಗ್ಯ ವಿಮೆಗೆ ₹6,400 ಕೋಟಿ ಮೀಸಲಿಟ್ಟರೆ, ₹1,600 ಕೋಟಿ ಹಣವನ್ನು ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು ಸ್ಥಾಪಿಸಲು ಬಳಸಲಾಗುವುದು.
ಆಯುಷ್ಮಾನ್ ಭಾರತ್ ಯೋಜನೆ ಆರಂಭವಾದಾಗಿನಿಂದ ಈವರೆಗೂ ಸುಮಾರು 10 ಲಕ್ಷ ಜನರು ಈ ಯೋಜನೆಯಡಿ ಚಿಕಿತ್ಸೆ ಪಡೆದಿದ್ದಾರೆ ಎಂದು ಹಂಗಾಮಿ ಹಣಕಾಸು ಸಚಿವ ಪಿಯೂಷ್ ಗೋಯಲ್ ಹೇಳಿದರು.
ಬಡವರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಂಡಿದೆ. ಜನೌಷಧಿ ಕೇಂದ್ರಗಳ ಮೂಲಕವೂ ಸರ್ಕಾರ ಅತ್ಯಂತ ಕಡಿಮೆ ದರದಲ್ಲಿ ಔಷಧವನ್ನು ನೀಡುತ್ತಿದೆ ಎಂದು ತಿಳಿಸಿದರು.
ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರ ದೊಡ್ಡ ಕ್ರಾಂತಿಯನ್ನೇ ಮಾಡಿದೆ. ಆಯುಷ್ಮಾನ್ ಭಾರತ್ ಯೋಜನೆ ಮೂಲಕ 50 ಕೋಟಿ ಜನರಿಗೆ ಸಹಾಯ ಮಾಡಲಾಗಿದೆ. ಯೋಜನೆ ಮೂಲಕ ಬಡವರ ₹3,000 ಕೋಟಿ ಉಳಿತಾಯವಾಗಿದೆ ಎಂದು ಗೋಯಲ್ ತಿಳಿಸಿದರು.
ಮತ್ತೊಂದು ಏಮ್ಸ್:ದೇಶದಾದ್ಯಂತ 21 ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳನ್ನು (ಏಮ್ಸ್) ಸ್ಥಾಪಿಸಲಾಗಿದೆ. 2014ರಲ್ಲಿ 14 ಏಮ್ಸ್ಗಳನ್ನು ಆರಂಭಿಸಲಾಗಿತ್ತು. ಈಗ ಇನ್ನೊಂದು ಏಮ್ಸ್ ಅನ್ನು ಹರಿಯಾಣದಲ್ಲಿ ಆರಂಭಿಸಲಾಗುವುದು ಎಂದು ಹೇಳಿದರು.
ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.