ನವದೆಹಲಿ:ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಶೇ 10 ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಈ ಕುರಿತಂತೆ ಸಲ್ಲಿಸಲಾಗಿರುವಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ, ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನೂ ಕೇಳಿದೆ.
ಜನಹಿತ್ ಅಭಿಯಾನ್ ಮತ್ತು ‘ಯೂತ್ ಫಾರ್ ಈಕ್ವಾಲಿಟಿ’ ಎಂಬ ಸರ್ಕಾರೇತರ ಸಂಸ್ಥೆ, ತೇಹಸೀನ್ ಪೂನಾವಾಲಾ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈ ಉತ್ತರ ನೀಡಿದೆ.
‘ಆರ್ಥಿಕ ಸ್ಥಿತಿಗತಿಯೇ ಮೀಸಲಾತಿಗೆ ಏಕೈಕ ಮಾನದಂಡವಾಗಬಾರದು. ಅಲ್ಲದೆ, ಮೀಸಲಾತಿ ಮಿತಿ ಶೇ 50 ಮೀರಬಾರದು. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಮೀಸಲಾತಿ ಮಿತಿ ಶೇ 60ಕ್ಕೇರುತ್ತದೆ. ಇದು ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆ’ ಎಂದು ಅರ್ಜಿದಾರರು ಹೇಳಿದ್ದಾರೆ.