ಗುಣಾ/ಮುಜಾಫ್ಫರ್ ನಗರ/ಲಖನೌ: ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಗುರುವಾರ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಕಾರ್ಮಿಕರು ಸಾವನ್ನಪ್ಪಿದ್ದು, 59 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಲಸೆ ಕಾರ್ಮಿಕರು ಉತ್ತರಪ್ರದೇಶ ಮತ್ತು ಬಿಹಾರದಲ್ಲಿರುವ ತಮ್ಮ ಸ್ವಗ್ರಾಮಗಳಿಗೆ ಮರಳುತ್ತಿದ್ದಾಗ ಈ ದುರಂತ ನಡೆದಿದೆ.
ಮಧ್ಯಪ್ರದೇಶದ ಗುಣಾ ಪಟ್ಟಣದಲ್ಲಿ ನಡೆದಿದ್ದು, ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 8 ವಲಸೆ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 55 ಮಂದಿ ಗಾಯಗೊಂಡಿದ್ದಾರೆ. ಮೃತ ಕಾರ್ಮಿಕರು ಉತ್ತರ ಪ್ರದೇಶದ ಉನ್ನಾವೊ ಮತ್ತು ರಾಯ್ಬರೇಲಿ ಜಿಲ್ಲೆಗೆ ಸೇರಿದವರುಎಂದು ಪೊಲೀಸರು ತಿಳಿಸಿದ್ದಾರೆ.
ಸುಮಾರು 65 ವಲಸೆ ಕಾರ್ಮಿಕರನ್ನು ತುಂಬಿಕೊಂಡಿದ್ದ ಟ್ರಕ್ ಮಹಾರಾಷ್ಟ್ರದಿಂದ ಉತ್ತರ ಪ್ರದೇಶಕ್ಕೆ ಹೊರಟಿತ್ತು.ಗುಣಾ ಪಟ್ಟಣದ ಬೈಪಾಸ್ ರಸ್ತೆ ಬಳಿ ಗುರುವಾರ ಬೆಳಗಿನ ಜಾವ 3 ಗಂಟೆ ಹೊತ್ತಿಗೆ ಖಾಲಿ ಬಸ್ಸೊಂದು ವಿರುದ್ಧ ದಿಕ್ಕಿನಲ್ಲಿ ಬಂದಾಗ ಟ್ರಕ್, ಬಸ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತರುಣ್ ನಾಯಕ್ ತಿಳಿಸಿದ್ದಾರೆ.
ಮತ್ತೊಂದು ಘಟನೆ ಉತ್ತರ ಪ್ರದೇಶದ ಮುಜಾಫ್ಪರ್ ನಗರದ ದೆಹಲಿ–ಸಹರಾನ್ಪುರದ ಹೆದ್ದಾರಿಯಲ್ಲಿ ನಡೆದಿದೆ. ಪಂಜಾಬ್ನಿಂದ ಬಿಹಾರಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಬಸ್ ಹರಿದ ಪರಿಣಾಮ 6 ವಲಸೆ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ವೇಳೆ ಬಸ್ ಚಾಲಕ ಮದ್ಯದ ಅಮಲಿನಲ್ಲಿದ್ದ. ಚಾಲಕನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕರಿ ಅಭಿಷೇಕ್ ಯಾದವ್ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮುಜಾಫ್ಫರ್ ನಗರದಲ್ಲಿ ನಡೆದ ಅಪಘಾತದಲ್ಲಿಮೃತಪಟ್ಟವರ ಸಂಬಂಧಿಕರಿಗೆ ತಲಾ ₹ 2ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ ₹ 50 ಸಾವಿರ ಪರಿಹಾರ ಘೋಷಿಸಿದ್ದಾರೆ.