ಮೊರಾದಾಬಾದ್: ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ಸರಿಸುಮಾರು1,700 ಜನ್ಧನ್ ಖಾತೆಯಲ್ಲಿ ₹1.7 ಕೋಟಿ ಠೇವಣಿಯಾಗಿದ್ದು ಈ ಬಗ್ಗೆ ಚುನಾವಣಾ ಆಯೋಗ ತನಿಖೆ ನಡೆಸಲು ಮುಂದಾಗಿದೆ.
ಕಳೆದ ಕೆಲವು ದಿನಗಳ ಹಿಂದೆ 1,700 ಜನ್ಧನ್ ಖಾತೆಗಳಿಗೆ ತಲಾ ₹10,000 ಠೇವಣಿ ಮಾಡಲಾಗಿದೆ.ಈ ಬಗ್ಗೆ ತನಿಖಾ ಸಂಸ್ಥೆಗಳು ತನಿಖೆ ನಡೆಸಲಿದ್ದು ಚುನಾವಣಾ ಕಣಕ್ಕಿಳಿದಿರುವ ಅಭ್ಯರ್ಥಿಗಳು ಮತದಾರರಿಗೆ ಲಂಚ ನೀಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಆದಾಯ ತೆರಿಗೆ ಇಲಾಖೆ ಸೇರಿದಂತೆ ಇತರ ತನಿಖಾ ಸಂಸ್ಥೆಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಮತದಾರರ ಖಾತೆಗೆ ಕಪ್ಪು ಹಣವನ್ನು ವರ್ಗಾಯಿಸಲಾಗಿದೆಯೇ? ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
ಬ್ಯಾಂಕ್ನಲ್ಲಿ ಠೇವಣಿಯಾಗಿರುವ ಹಣದ ಬಗ್ಗೆ ವರದಿ ನೀಡುವಂತೆ ಚುನಾವಣಾ ಆಯೋಗ ತನಿಖಾ ಸಂಸ್ಥೆಗಳಿಗೆ ಆದೇಶಿಸಿದೆ.ಆದಾಗ್ಯೂ, ಸರ್ಕಾರದ ಯಾವುದಾದರೂ ಯೋಜನೆಯ ಹಣ ಈ ರೀತಿ ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಮಾಡಿರಬಹುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.