ಮಥುರಾ: ‘ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಒಂದು ತಿಂಗಳು ಪಾಕಿಸ್ತಾನದಲ್ಲಿ ನೆಲೆಸಿ, ಅಲ್ಲಿಯ ಹಿಂದುಗಳು ಅನುಭವಿಸುತ್ತಿರುವ ದೌರ್ಜನ್ಯವನ್ನು ಅರ್ಥಮಾಡಿಕೊಳ್ಳಲಿ’ ಎಂದು ಬಿಜೆಪಿಯ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಸವಾಲೆಸೆದಿದ್ದಾರೆ.
ಎನ್ಆರ್ಸಿ, ಎನ್ಪಿಆರ್ ಕಾಯ್ದೆ ವಿರುದ್ಧ ಅಖಿಲೇಶ್ ಯಾದವ್ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಸಿಂಗ್ ಹರಿಹಾಯ್ದಿದ್ದಾರೆ.
‘ಅಖಿಲೇಶ್ ಪಾಕಿಸ್ತಾನದಲ್ಲಿಯೇ ಇದ್ದು, ಹಿಂದು ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಬೇಕು. ಆಗ ಅವರಿಗೆ ಅಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಅನುಭವವಾಗುತ್ತದೆ’ ಎಂದು ಸಿಂಗ್ ಹೇಳಿದ್ದಾರೆ.
‘ಯಾದವ್ ಅವರು ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿ, ಕುಟುಂಬ ಸದಸ್ಯರಿಗೆ ಪ್ರಚಾರ ನೀಡುತ್ತಿದ್ದಾರೆ’ ಎಂದೂ ಅವರು ಆರೋಪಿಸಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯ ಅವರನ್ನೂ ಟೀಕಿಸಿದ ಸಿಂಗ್, ‘ಪೌರತ್ವ (ತಿದ್ದುಪಡಿ) ಕಾಯ್ದೆ ಬಡವರ ವಿರುದ್ಧವಾಗಿಲ್ಲ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಜನರ ದಿಕ್ಕುತಪ್ಪಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.
ಎನ್ಆರ್ಪಿ ಮತ್ತು ಎನ್ಆರ್ಸಿ ದೇಶದ ಬಡವರ ಮತ್ತು ಅಲ್ಪಸಂಖ್ಯಾತರ ವಿರುದ್ಧವಾಗಿದೆ ಎಂದು ಅಖಿಲೇಶ್ ಯಾದವ್ ಕಳೆದ ವಾರ ಹೇಳಿದ್ದರು.