ಲಂಡನ್: ಭಾರತದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಜಾಗತಿಕ ತಾಪಮಾನ ಬದಲಾವಣೆ ಕುರಿತು ಯಾವುದೇ ಚರ್ಚೆಗಳು ನಡೆಯದಿರುವುದು ನಿರಾಸೆ ಮೂಡಿಸಿದೆ ಎಂದು ಜ್ಞಾನಪೀಠ ಪುರಸ್ಕೃತ ಲೇಖಕ ಅಮಿತಾವ್ ಘೋಷ್ ಬೇಸರ ವ್ಯಕ್ತಪಡಿಸಿದ್ದಾರೆ.
ಶೀಘ್ರದಲ್ಲೇ ಬಿಡುಗಡೆಯಾಗಲಿರುವ ತನ್ನ 'ಗನ್ ಐಲೆಂಡ್' ಪುಸ್ತಕದ ಕುರಿತು ಲಂಡನ್ನಲ್ಲಿ ಪ್ರಚಾರ ಕೈಗೊಂಡಿರುವ ಅವರು, ‘ಭಾರತದಲ್ಲಿ ಸಾಕಷ್ಟು ಸಮಸ್ಯೆಗಳು ತಾಂಡವಾಡುತ್ತಿವೆ. ಆದರೆ ಅವ್ಯಾವವೂ ಚುನಾವಣೆಯಲ್ಲಿ ಪ್ರಮುಖವಾಗಿ ಚರ್ಚೆಯೇ ಆಗಲಿಲ್ಲ’ ಎಂದು ಹೇಳಿದ್ದಾರೆ.
ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ನ (ಎಲ್ಎಸ್ಇ) ದಕ್ಷಿಣ ಏಷ್ಯಾ ಕೇಂದ್ರದಲ್ಲಿ ಮಂಗಳವಾರ ಸಂಜೆ ನಡೆದ ಸಂವಾದದಲ್ಲಿ ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.
‘ಇತರ ದೇಶಗಳಿಗಿಂತ ಭಾರತದಲ್ಲಿ ತಾಪಮಾನ ಮತ್ತು ಪರಿಸರ ಸಂಬಂಧಿ ಸಮಸ್ಯೆಗಳು ಗಂಭೀರವಾಗಿವೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಈ ವಿಷಯಗಳು ನಗಣ್ಯವಾಗಿದ್ದು ನೋವು ತಂದಿದೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.