ಅಮರಾವತಿ: ಯುಪಿಎ ಒಕ್ಕೂಟದ ಪ್ರಮುಖ ಪಕ್ಷವಾಗಿ ಗುರುತಿಸಿಕೊಂಡಿದ್ದ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ವಿಫಲರಾಗಿದ್ದಾರೆ.
ವೈ. ಎಸ್. ಜಗನ್ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷ, ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳ ಪೈಕಿ ಸುಮಾರು 100 ಸ್ಥಾನಗಳಲ್ಲಿ ಗೆದ್ದುಕೊಂಡಿದೆ. ತೆಲುಗುದೇಶಂ ಪಕ್ಷ ಅನಿರೀಕ್ಷಿತವೆಂಬಂತೆ 25 ಸ್ಥಾನಗಳನ್ನು ಗೆಲ್ಲುವುದಕ್ಕೂ ಪ್ರಾಯಸಪಟ್ಟಿದೆ.
ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ಕೂಡ ನೀರಿಕ್ಷಿತ ಮಟ್ಟದಲ್ಲಿ ಯಶಸ್ಸು ಗಳಿಸಿಲ್ಲ. ಎರಡು ಕ್ಷೇತ್ರಗಳಲ್ಲಿ ನಿಂತಿದ್ದ ಪವನ್ ಕಲ್ಯಾಣ್ ಹೀನಾಯವಾಗಿ ಸೋತಿದ್ದಾರೆ.
ಕಡಪ ಜಿಲ್ಲೆಯ ಪುಲಿವೆಂದುಲ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಗನ್ ಮೋಹನ್ ರೆಡ್ಡಿ ಅವರು ಭಾರಿ ಅಂತರದೊಂದಿಗೆ ಗೆದ್ದದ್ದು, ಆಂಧ್ರಪ್ರದೇಶದ ಎರಡನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಲೋಕಸಭೆಯಲ್ಲೂ ಫ್ಯಾನ್ ಗಾಳಿ: ಆಂಧ್ರಪ್ರದೇಶದ 25 ಲೋಕಸಭಾ ಕ್ಷೇತ್ರಗಳ ಪೈಕಿ ವೈಎಸ್ಆರ್ ಕಾಂಗ್ರೆಸ್ ಪಕ್ಷವೇ ಹೆಚ್ಚು ಸ್ಥಾನಗಳನ್ನು ಗೆದ್ದು ತೆಲುಗುದೇಶಂ ಪಕ್ಷಕ್ಕೆ ತೀವ್ರ ಮುಖಭಂಗ ಮಾಡಿದೆ.