ನವದೆಹಲಿ:ಜಮ್ಮು–ಕಾಶ್ಮೀರದ ವಿಶೇಷಾಧಿಕಾರ ರದ್ದುಪಡಿಸಿದ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸಂವಿಧಾನ ಪೀಠಕ್ಕೆ ಒಪ್ಪಿಸಿದೆ. ಈ ಅರ್ಜಿಗಳ ವಿಚಾರಣೆ ಮಂಗಳವಾರದಿಂದ ಆರಂಭವಾಗಲಿದೆ.
ಕಾಶ್ಮೀರದಲ್ಲಿ ಪತ್ರಕರ್ತರ ಸಂಚಾರಕ್ಕೆ ನಿರ್ಬಂಧ ಮತ್ತು ಮಕ್ಕಳನ್ನೂ ವಶದಲ್ಲಿ ಇರಿಸಿಕೊಂಡಿರುವುದನ್ನು ಪ್ರಶ್ನಿಸಿದ ಅರ್ಜಿಗಳು ಇದರಲ್ಲಿ ಸೇರಿವೆ.
ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ವಿಚಾರಣೆ ನಡೆಸಲಿದೆ.
370ನೇ ವಿಧಿ ಅಡಿಯಲ್ಲಿ ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರ ರದ್ದತಿ ಮತ್ತು ಜಮ್ಮು–ಕಾಶ್ಮೀರವನ್ನು ಕೇಂದ್ರಾಡಳಿತದ ಎರಡು ಪ್ರದೇಶಗಳಾಗಿ ವಿಂಗಡಿಸಿರುವುದನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.
ನ್ಯಾಷನಲ್ ಕಾನ್ಫರೆನ್ಸ್, ನಿವೃತ್ತ ಸೇನಾಧಿಕಾರಿಗಳು ಮತ್ತು ನಾಗರಿಕ ಸೇವೆ ಅಧಿಕಾರಿಗಳು ಕೂಡ ಸರ್ಕಾರದ ನಿರ್ಧಾರದ ವಿರುದ್ಧ ಮನವಿಗಳನ್ನು ಸಲ್ಲಿಸಿದ್ದಾರೆ.