ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ₹10 ಲಕ್ಷ, ಮನೆ ಕಳೆದುಕೊಂಡವರಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.
ಗುರುವಾರ ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ಗಲಭೆ ಸಂತ್ರಸ್ತರಿಗೆ ಆಸರೆ ನೀಡಲು ರಾಜ್ಯ ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳಲಿದೆ. ಗಲಭೆಯಲ್ಲಿ ಸಾವಿಗೀಡಾದವರ ಕುಟುಂಬದವರಿಗೆ ತಲಾ ₹ 10 ಲಕ್ಷ, ಮನೆ ಕಳೆದುಕೊಂಡವರಿಗೆ ₹5 ಲಕ್ಷಗಳನ್ನು ಸರ್ಕಾರ ನೀಡಲಿದೆ’ ಎಂದಿದ್ದಾರೆ.
ಗಲಭೆಯಲ್ಲಿ ಗಾಯಗೊಂಡವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅಂತವರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
‘ತಪ್ಪಿತಸ್ಥರು ಯಾರೇ ಆಗಿರಲಿ ಅಂತವರಿಗೆ ಶಿಕ್ಷೆಯಾಗಬೇಕು. ಒಂದು ವೇಳೆ ಆಮ್ ಆದ್ಮಿ ಪಕ್ಷದ ಯಾವುದೇ ಮುಖಂಡ ತಪ್ಪು ಮಾಡಿದ್ದರೆ, ಅಂತವರಿಗೆ ಎರಡು ಪಟ್ಟು ಶಿಕ್ಷೆಯಾಗಲಿ. ಈ ವಿಚಾರದಲ್ಲಿ ಯಾವುದೇ ರಾಜಕೀಯ ಬೇಡ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.