ಕಲಬುರ್ಗಿ: ಕಲಬುರ್ಗಿ ದಕ್ಷಿಣ ಮತ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕೃಷ್ಣಾಜಿ ಕುಲಕರ್ಣಿ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ.
‘26 ವರ್ಷಗಳಿಂದ ಕಾಂಗ್ರೆಸ್ನಲ್ಲಿ ದುಡಿಯುತ್ತಿದ್ದೇನೆ. ಆದರೂ ಟಿಕೆಟ್ ಸಿಗದಿರುವದು ಬೇಸರವಾಗಿದೆ. ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲದಂತಾಗಿದೆ. ನಾಳೆ ನಮ್ಮ ಸಮಾಜದವರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಯಾವೊಬ್ಬ ಬ್ರಾಹ್ಮಣರಿಗೂ ಟಿಕೆಟ್ ಸಿಕ್ಕಿಲ್ಲ. ಇದರಿಂದ ಸಮಾಜಕ್ಕೆ ಅನ್ಯಾಯವಾದಂತಾಗಿದೆ ಎಂದರು.
* ಲಿಂಗಸುಗೂರು ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಅಸ್ಪೃಶ್ಯ ಜಾತಿ ಮುಖಂಡರಿಗೆ ಕಾಂಗ್ರೆಸ್ ಟಿಕೆಟ್ ನೀಡದಿರುವುದನ್ನು ವಿರೋಧಿಸಿ ವಿವಿಧ ದಲಿತಪರ ಸಂಘಟನೆಗಳು ಲಿಂಗಸುಗೂರು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿವೆ.
ಬಳ್ಳಾರಿ: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ ಬೆಂಬಲಿಗರು ಸಿರುಗುಪ್ಪದಲ್ಲಿ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು.
* ಹಾನಗಲ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಮನೋಹರ ತಹಶೀಲ್ದಾರ್ ಹಾಗೂ ಬೆಂಬಲಿಗರಿಂದ ಪ್ರತಿಭಟನೆ ನಡೆಯಿತು.