ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡೀಪುರ ಸಂಚಾರ ನಿಷೇಧದ ವಿರುದ್ಧ ಕೇರಳ ನಿರ್ಣಯ

Last Updated 8 ನವೆಂಬರ್ 2019, 16:55 IST
ಅಕ್ಷರ ಗಾತ್ರ

ತಿರುವನಂತಪುರ: ಬಂಡೀಪುರ ಹುಲಿ ರಕ್ಷಿತಾರಣ್ಯವನ್ನು ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ರಾತ್ರಿ ಸಂಚಾರ ನಿಷೇಧವನ್ನು ರದ್ದುಪಡಿಸಬೇಕು ಎಂದು ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆಯು ಸರ್ವಾನುಮತದಿಂದ ಅಂಗೀಕರಿಸಿದೆ.

ದೇಶದಲ್ಲಿ 50ಕ್ಕೂ ಹೆಚ್ಚು ಹುಲಿ ರಕ್ಷಿತಾರಣ್ಯಗಳಿವೆ. ಈ ಯಾವುದೇ ಅರಣ್ಯವನ್ನು ಹಾದು ಹೋಗುವ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ನಿಷೇಧ ಇಲ್ಲ. ಹಾಗಾಗಿ, ಬಂಡೀಪುರ ರಕ್ಷಿತಾರಣ್ಯವನ್ನು ಹಾದು ಹೋಗುವ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ನಿಷೇಧಿಸಿರುವುದು ತಾರತಮ್ಯದ ಕ್ರಮ. ಈ ರಸ್ತೆಯಲ್ಲಿ ಸಂಪೂರ್ಣವಾಗಿ ಸಂಚಾರ ನಿಷೇಧದ ಪ್ರಸ್ತಾವವು ಕೇರಳದ ವಯನಾಡ್‌ನ ಜನರಲ್ಲಿ ಭಾರಿ ಕಳವಳಕ್ಕೆ ಕಾರಣವಾಗಿದೆ. ಜನರ ಸಂಚಾರದ ಹಕ್ಕನ್ನು ಖಾತರಿಪಡಿಲು ಈಗ ಇರುವ ಸಂಚಾರ ನಿಷೇಧವನ್ನು ಕೇಂದ್ರವು ತೆರವು ಮಾಡಬೇಕು ಎಂದು ನಿರ್ಣಯದಲ್ಲಿ ಹೇಳಲಾಗಿದೆ.

ಕೇರಳದ ಸಾರಿಗೆ ಸಚಿವ ಎ.ಕೆ. ಶಶೀಂದ್ರನ್‌ ಅವರು ನಿರ್ಣಯವನ್ನು ಮಂಡಿಸಿದರು.

ಬಂಡೀಪುರವನ್ನು ಹಾದುಹೋಗುವ ಹೆದ್ದಾರಿಗೆ ಪರ್ಯಾಯವಾಗಿ ರಾಷ್ಟ್ರೀಯ ಹೆದ್ದಾರಿ 275 ಮತ್ತು ರಾಜ್ಯ ಹೆದ್ದಾರಿ 90 ಅನ್ನು ಸೂಚಿಸಲಾಗಿದೆ. ಈ ರಸ್ತೆಗಳು ಕರ್ನಾಟಕದ ನಾಗರಹೊಳೆ ರಾಷ್ಟ್ರೀಯ ಉದ್ಯಾನ ಮತ್ತು ಕೇರಳದ ತೋಲ್‌ಪಟ್ಟಿ ವನ್ಯಧಾಮವನ್ನು ಹಾದು ಹೋಗುತ್ತಿವೆ. ರಾಷ್ಟ್ರೀಯ ಹೆದ್ದಾರಿ 766ರಲ್ಲಿ ರಾತ್ರಿ ಸಂಚಾರ ನಿಷೇಧವು ವಯನಾಡ್‌, ಗುಂಡ್ಲುಪೇಟೆ, ನಂಜನಗೂಡು ಮತ್ತು ಕೊಳ್ಳೇಗಾಲದ ಜನರಿಗೆ ಭಾರಿ ಸಂಕಷ್ಟ ಉಂಟು ಮಾಡಿದೆ ಎಂದೂ ನಿರ್ಣಯವು ಹೇಳಿದೆ.

ಬಂಡೀ‍ಪುರ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ನಿಷೇಧವನ್ನು ವಿರೋಧಿಸಿ ವಯನಾಡ್‌ನಲ್ಲಿ ಕಳೆದ ತಿಂಗಳು ಭಾರಿ ಪ್ರತಿಭಟನೆ ನಡೆದಿತ್ತು. ಕಾಂಗ್ರೆಸ್‌ ಮುಖಂಡ ಮತ್ತು ವಯನಾಡ್‌ ಸಂಸದ ರಾಹುಲ್‌ ಗಾಂಧಿಈ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದರು. ಸಂಚಾರ ನಿಷೇಧದ ವಿಚಾರದಲ್ಲಿ ಮಧ್ಯಪ್ರವೇಶಿಸುವುದಾಗಿ ಕೇರಳ ಸರ್ಕಾರ ಭರವಸೆ ಕೊಟ್ಟ ಬಳಿಕ ಈ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT