ನವದೆಹಲಿ: ‘ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹಾಗೂ ಆ ಪಕ್ಷದ ಇತರ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳಲು ಆಯೋಗ ವಿಳಂಬ ಮಾಡುತ್ತಿದೆ’ ಎಂದು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.
ಬಿಜೆಪಿ ಮುಖಂಡ, ದೆಹಲಿ ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕ ವಿಜೇಂದ್ರ ಗುಪ್ತಾ ಅವರು ಬುಧವಾರ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿಮಾಡಿ ಲಿಖಿತ ದೂರು ನೀಡಿದ್ದಲ್ಲದೆ, ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ‘ಎಎಪಿ ನಾಯಕರ ವಿರುದ್ಧ ನಾವು ಚುನಾವಣಾ ಆಯೋಗ ಹಾಗೂ ದೆಹಲಿಯ ಮುಖ್ಯ ಚುನಾವಣಾಧಿಕಾರಿಗೆ ಸಾಕ್ಷ್ಯಗಳ ಸಹಿತವಾಗಿ ದೂರು ನೀಡಿದ್ದೆವು. ಆದರೆ ಅವರು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಆಯೋಗವು ಎಎಪಿಯ ಪರವಾಗಿ ಕೆಲಸ ಮಾಡುತ್ತಿರುವಂತೆ ಭಾಸವಾಗುತ್ತಿದೆ’ ಎಂದರು.