ನವದೆಹಲಿ: ‘ಉಪವಾಸಕ್ಕೆ ಹೆದರಿ ಬ್ರಿಟಿಷರು ಸ್ವಾತಂತ್ರ್ಯ ಕೊಟ್ಟು ಓಡಿ ಹೋದರು ಎಂಬ ಇತಿಹಾಸದ ಪಾಠ ಕೇಳಿದರೆ ತಣ್ಣಗಿರುವ ರಕ್ತ ಹೆಪ್ಪುಗಟ್ಟುತ್ತದೆ’ ಎಂದು ಹೇಳಿದ್ದ ಸಂಸದ ಅನಂತ ಕುಮಾರ ಹೆಗಡೆಗೆ ಬಿಜೆಪಿ ಶೋಕಾಸ್ ನೋಟಿಸ್ ನೀಡಿದೆ.
ಗಾಂಧೀಜಿ ಅವರನ್ನು ಅವಮಾನಿಸುವ ರೀತಿಯ ಹೇಳಿಕೆ ನೀಡಿರುವುದು ಖಂಡನೀಯ ಎಂದು ಅಭಿಪ್ರಾಯಪಟ್ಟಿರುವ ಪಕ್ಷದ ವರಿಷ್ಠರು, ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿರುವುದಾಗಿ ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ತಿಳಿಸಿದ್ದಾರೆ.
‘ಹೇಳಿಕೆ ಬಗ್ಗೆ ಬೇಷರತ್ ಕ್ಷಮೆ ಕೋರುವಂತೆ ಅವರಿಗೆ ಸೂಚಿಸಲಾಗಿದೆ’ ಎಂದು ಪಕ್ಷದ ಮೂಲಗಳು ತಿಳಿಸಿವೆ.
‘ಕೆಲವು ಹೋರಾಟಗಾರರು ಬ್ರಿಟಿಷರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದರು. ಲಾಠಿ ಏಟು ತಿನ್ನದವರನ್ನೂ ಸ್ವಾತಂತ್ರ್ಯ ಹೋರಾಟಗಾರರೆಂದು ಬಿಂಬಿಸಲಾಗಿತ್ತು’ ಎಂದು ಹೆಗಡೆ ಹೇಳಿದ್ದರು.