ಮುಂಬೈ: ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವುದು ಹಾಗೂ ಕರಪತ್ರ ಹಂಚುವುದನ್ನು ನಿಷೇಧಿಸಿ ಇಲ್ಲಿನ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬುಧವಾರ ಸುತ್ತೋಲೆ ಹೊರಡಿಸಿದೆ. ಆದರೆ, ಯಾವುದು ದೇಶ ವಿರೋಧಿ ಚಟುವಟಿಕೆ ಎಂಬುದನ್ನು ಇದರಲ್ಲಿ ತಿಳಿಸಿಲ್ಲ.
ಶೈಕ್ಷಣಿಕ ವಾತಾವರಣ ಹಾಳು ಮಾಡುವ ಚಟುವಟಿಕೆ ನಡೆಸಲು ಅವಕಾಶ ಇಲ್ಲ. ಭಾಷಣ, ನಾಟಕ, ಸಂಗೀತ ಕಾರ್ಯಕ್ರಮಗಳ ಮೇಲೂ ನಿಷೇಧ ಹೇರಲಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಅಧ್ಯಾಪಕರೂ ಪಾಲ್ಗೊಳ್ಳುವಂತಿಲ್ಲ ಎಂದು ತಿಳಿಸಿದೆ.
ನಿರ್ಭಯಾ ಪ್ರಕರಣ: ಮುಖೇಶ್ ಅರ್ಜಿ ವಜಾ
ನವದೆಹಲಿ (ಪಿಟಿಐ): ಕ್ಷಮಾದಾನದ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಕ್ರಮ ಪ್ರಶ್ನಿಸಿ ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ಮುಖೇಶ್ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾ ಮಾಡಿದೆ.
ವಿಚಾರಣೆ ನಡೆಸಿದ ನ್ಯಾಯಾಲಯ, ರಾಷ್ಟ್ರಪತಿಯವರು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ಪರಿಗಣಿಸಿದ್ದಾರೆ. ಜತೆಗೆ, ಅಪರಾಧಿಯ ಕ್ರಿಮಿನಲ್ ಇತಿಹಾಸ, ಕುಟುಂಬದ ಆರ್ಥಿಕ ಸ್ಥಿತಿಯನ್ನು ಸಹ ಗಮನಿಸಿದ್ದಾರೆ ಎಂದು ಹೇಳಿದೆ.
ಕ್ಷಮಾದಾನ ಅರ್ಜಿ ಸಲ್ಲಿಕೆ: ಇದೇ ಪ್ರಕರಣದ ಇನ್ನೊಬ್ಬ ಅಪರಾಧಿ ವಿನಯ್ ಕುಮಾರ್ ಶರ್ಮಾ, ಕ್ಷಮಾದಾನ ಕೋರಿ ರಾಷ್ಟ್ರಪತಿ ಅವರಿಗೆ ಬುಧವಾರ ಮನವಿ ಸಲ್ಲಿಸಿದ್ದಾನೆ.
ಹೆದ್ದಾರಿಗಳಲ್ಲಿ ಎಲ್ಎನ್ಜಿ ಘಟಕ
ನವದೆಹಲಿ: ಹೆದ್ದಾರಿಗಳಲ್ಲಿ ಎಲ್ಎನ್ಜಿ ಘಟಕಗಳು, ಎಲೆಕ್ಟ್ರಿಕ್ ಚಾರ್ಜಿಂಗ್ ಅಥವಾ ಪೆಟ್ರೋಲ್ ಬಂಕ್ಗಳನ್ನು ಆರಂಭಿಸಲು ಸರ್ಕಾರ ಉತ್ತೇಜನ ನೀಡಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.