ನವದೆಹಲಿ: ಲಡಾಖ್ ಬಳಿ ಗಡಿಯಲ್ಲಿ ಸಂಘರ್ಷ, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ನಡುವೆಯೇ, ಚೀನಾದ ಯೋಧರು ದೇಶದ ಗಡಿ ಪ್ರವೇಶಿಸಿದ್ದಾರೆಯೇ ಇಲ್ಲವೇ ಎಂಬುದನ್ನು ಸ್ಪಷ್ಟಪಡಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆಗ್ರಹಿಸಿದ್ದಾರೆ.
‘ಚೀನಾದ ಕೆಲವು ಯೋಧರು ಲಡಾಖ್ನ ಪೂರ್ವ ಭಾಗದ ಗಡಿಯೊಳಗೆ ನುಗ್ಗಿದ್ದರು. ನಮ್ಮ ಯೋಧರು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯವಿದ್ದ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ‘ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದ್ದರು. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಅವರು ಟ್ವಿಟರ್ ಮೂಲಕ ಕೇಂದ್ರ ಸರ್ಕಾರಕ್ಕೆ ಈ ರೀತಿ ಪ್ರಶ್ನಿಸಿದ್ದಾರೆ.
‘ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನತೆ ಸಂಬಂಧ ಉಭಯ ದೇಶಗಳ ಸೇನೆಯ ಉನ್ನತ ಅಧಿಕಾರಿಗಳು ಜೂನ್ 6ರಂದು ಸಭೆ ನಡೆಸಲಿದ್ದಾರೆ’ ಎಂಬ ವರದಿಯನ್ನು ಸಹ ಅವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
‘ಸರ್ಕಾರ ಮೌನವಾಗಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿಕೊಡುತ್ತಿದೆ. ಹೀಗಾಗಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ದೇಶಕ್ಕೆ ಸ್ಪಷ್ಟ ಮಾಹಿತಿ ನೀಡಬೇಕು‘ ಎಂದೂ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.