ನವದೆಹಲಿ:ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಸಿಬಿಐ ಎಫ್ಐಆರ್ ದಾಖಲಿಸಿದೆ.
ಫೋನ್ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿ, ಆ.18ರಂದು ಅಧಿಕೃತ ಆದೇಶ ಹೊರಡಿಸಿತ್ತು. ಇದಾದ ಬಳಿಕ ಸಿಬಿಐ ಶುಕ್ರವಾರ ಎಫ್ಐಆರ್ ದಾಖಲಿಸಿದೆ.
ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 72 ಮತ್ತು ಭಾರತೀಯ ಟೆಲಿಗ್ರಾಫ್ ಕಾಯ್ದೆಯ ಸೆಕ್ಷನ್ 26 ಅಡಿ ಎಫ್ಐಆರ್ ದಾಖಲಾಗಿದೆ.
2018ರ ಆಗಸ್ಟ್ 1ರಿಂದ 2019ರ ಆಗಸ್ಟ್ 19ರ ಅವಧಿಯವರೆಗೆ ತನಿಖೆ ನಡೆಸುವಂತೆ ಆದೇಶದಲ್ಲಿ ಕೋರಲಾಗಿತ್ತು. ರಾಜಕೀಯ ಮುಖಂಡರು, ಅವರ ಸಂಬಂಧಿಕರು ಹಾಗೂ ಅಧಿಕಾರಿಗಳ ಫೋನ್ ಕದ್ದಾಲಿಕೆ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುವಂತೆ ಆದೇಶದಲ್ಲಿ ಹೇಳಲಾಗಿತ್ತು.
ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾ ನಿರೀಕ್ಷಕರ ಶಿಫಾರಸಿನ ಅನ್ವಯ ಈ ಪ್ರಕರಣವನ್ನು ಸಿಬಿಐ ತನಿಖೆ ಒಪ್ಪಿಸಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿತ್ತು.
ಆಡಳಿತ ಹಾಗೂ ವಿರೋಧ ಪಕ್ಷಗಳ ಕೆಲವು ನಾಯಕರ ಫೋನ್ಗಳನ್ನು ಕದ್ದಾಲಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಪ್ರಕರಣ ರಾಜ್ಯ ರಾಜಕೀಯ ವಲಯದಯಲ್ಲಿ ಕೋಲಾಹಲ ಸೃಷ್ಟಿಸಿತ್ತು. ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗ ಸಿಬಿಐಗೆ ಹಸ್ತಾಂತರವಾಗಿದೆ.
ಫೋನ್ ಕದ್ದಾಲಿಕೆಗೆ ಸಂಬಂಧಿಸಿದಂತೆ ಸಿಬಿಐಗೆ ಅಗತ್ಯವಿರುವ ಎಲ್ಲಾ ದಾಖಲೆಗಳು ಹಾಗೂ ಡೇಟಾಗಳನ್ನು ವರ್ಗಾಯಿಸುವಂತೆ ಸಂಬಂಧಿಸಿದ ಇಲಾಖೆಗಳು ಮತ್ತು ಅಧಿಕಾರಿಗಳಿಗೆ ಸೂಚಿಸಲಾಗಿತ್ತು.
ಫೋನ್ ಕದ್ದಾಲಿಕೆ ವಿಚಾರ ರಾಜಕೀಯ ನಾಯಕರ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿತ್ತು.