ನವದೆಹಲಿ:ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಸೋಮವಾರ ದೆಹಲಿ ಹೈಕೋರ್ಟ್ನಲ್ಲಿ ಮತ್ತಷ್ಟು ಪೂರಕ ದಾಖಲೆಗಳೊಂದಿಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇ.ಡಿ) ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿದ್ದ ಚಿದಂಬರಂ ಕಳೆದ ಜನವರಿ 25ರಂದು ಕೋರ್ಟ್ ಮೊರೆ ಹೋಗಿದ್ದರು. ಆದರೆ, ನ್ಯಾಯಾಧೀಶ ಸುನೀಲ್ ಗೌರ್ ಆದೇಶವನ್ನು ಕಾಯ್ದಿರಿಸಿದ್ದರು.
ಅರ್ಜಿ ಸಲ್ಲಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಸಿಬಿಐ ಮತ್ತು ಇ.ಡಿ ಅವರ ವಿಚಾರಣೆ ನಡೆಸಲು ಅನುಮತಿ ಕೋರಿದ್ದವು. ಚಿದಂಬರಂ ವಿಚಾರಣೆ ನಡೆಸಲು ಕೇಂದ್ರ ಸರ್ಕಾರವು ಸಿಬಿಐಗೆ ಅನುಮತಿ ನೀಡಿದೆ.
ಐಎನ್ಎಕ್ಸ್ ಮೀಡಿಯಾ ಕಂಪನಿಯಲ್ಲಿ ವಿದೇಶಿ ಹೂಡಿಕೆಗೆ ಅನುಮತಿ ನೀಡುವ ವೇಳೆ ಅಂದು ಹಣಕಾಸು ಸಚಿವರಾಗಿದ್ದ ಚಿದಂಬರಂ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪವಿದೆ.