ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಚುನಾವಣೆಗೆ ಮತದಾನ ಆರಂಭವಾಗಿದೆ.
ಎರಡನೇ ಹಂತದಲ್ಲಿ 20ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನಕ್ಸಲ್ ಪೀಡಿತ 18 ಕ್ಷೇತ್ರಗಳಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ3 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪೂರ್ವ ಮತ್ತು ಪಶ್ಚಿಮ ಜೆಮ್ಶೆಡ್ ಪುರದಲ್ಲಿ ಸಂಜೆ 5 ಗಂಟೆಯವರೆಗೂ ಮತದಾನ ನಡೆಯಲಿದೆ.
ಮುಖ್ಯಮಂತ್ರಿ ರಘುವರ್ ದಾಸ್, ಸ್ಫೀಕರ್ ಒರಾನ್ ಸೇರಿದಂತೆ ಐವರು ಸಚಿವರು ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಲಕ್ಷ್ಮಣ್ ಗಿಲುವಾ, ಕಾಂಗ್ರೆಸ್ ಪಕ್ಷದ ವಕ್ತಾರ ಗೌರವ್ ವಲ್ಲಭ ಹಾಗೂ ಸರಯೂ ರೈ ಅವರು ಚುನಾವಣಾ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.
20 ಕ್ಷೇತ್ರಗಳ ಪೈಕಿ 16 ಕ್ಷೇತ್ರಗಳು ಮೀಸಲು ಕ್ಷೇತ್ರಗಳಾಗಿವೆ. ಅಧಿಕಾರದಲ್ಲಿರುವ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ. ಇನ್ನು ಜೆಎಂಎಂ ಹಾಗೂ ಕಾಂಗ್ರೆಸ್ ಪಕ್ಷಗಳು ಸ್ವತಂತ್ರವಾಗಿ ಅಧಿಕಾರ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿವೆ.