ಕೋಲ್ಕತ್ತ : ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಶನಿವಾರವೂ ಮುಂದುವರಿದಿದೆ. ಪ್ರತಿಭಟನೆ ಮತ್ತು ಹಿಂಸಾಚಾರವು ರಾಜ್ಯದ ಹೌರಾ ಜಿಲ್ಲೆಯಲ್ಲಿ ತೀವ್ರ ಸ್ವರೂಪಡ ಪಡೆದಿದೆ.
ಶನಿವಾರ ಬೆಳಿಗ್ಗೆಯೇ ಹೌರಾ ಜಿಲ್ಲೆಯ ಸಂಕ್ರೇಲ್ ರೈಲು ನಿಲ್ದಾಣಕ್ಕೆ ಬೆಂಕಿ ಹಚ್ಚಿದ್ದಾರೆ. ರೈಲು ನಿಲ್ದಾಣ ಭಾಗಶಃ ಸುಟ್ಟುಹೋಗಿವೆ. ಪ್ರತಿಭಟನಕಾರರು ರೈಲು ನಿಲ್ದಾಣದಲ್ಲಿದ್ದ ಫಲಕಗಳು, ಕಾಂಕ್ರೀಟ್ ಬೆಂಚುಗಳನ್ನು ಧ್ವಂಸ ಮಾಡಿದ್ದಾರೆ. ಇದನ್ನು ತಡೆಯಲು ಬಂದ ರೈಲ್ವೆ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ. ಇದರ ಬೆನ್ನಲ್ಲೇ ಜಿಲ್ಲೆಯ ಹಲವೆಡೆ ರೈಲು ತಡೆ ನಡೆಸಲಾಗಿದೆ. ಹೀಗಾಗಿ ಬೆಳಿಗ್ಗೆ 11ರಿಂದ ಮಧ್ಯಾಹ್ನ ನಾಲ್ಕರವರೆಗೆ ರೈಲು ಸಂಚಾರ ಸ್ಥಗಿತವಾಗಿತ್ತು.
ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಜನರು ಶಾಂತಿಯುತ ಪ್ರತಿಭಟನೆ ನಡೆಸಬೇಕು’ ಎಂದು ಕರೆಕೊಟ್ಟರು.ಆದರೆ, ಮಧ್ಯಾಹ್ನದ ನಂತರ ಪ್ರತಿಭಟನೆ ಮತ್ತಷ್ಟು ತೀವ್ರವಾಯಿತು. ಮುಂಬೈ–ಕೋಲ್ಕತ್ತ ಹೆದ್ದಾರಿ ಮತ್ತು ಮುಂಬೈ–ದೆಹಲಿ ಹೆದ್ದಾರಿ ಮಧ್ಯೆ ಸಂಪರ್ಕ ಕಲ್ಪಿಸುವ ಕೋನಾ ಎಕ್ಸ್ಪ್ರೆಸ್ ಹೆದ್ದಾರಿಗೆ ಇಳಿದ ಪ್ರತಿಭಟನಕಾರರು, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದರು. ಇದರಿಂದ ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು.
ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಮುಂದಾದರು. ಆಗ ಕಲ್ಲು ತೂರಾಟ ನಡೆಯಿತು. ಪೊಲೀಸರು ಶ್ರುವಾಯು ಷೆಲ್ ಸಿಡಿಸಿದರು. ಇದರಿಂದ ರೊಚ್ಚಿಗೆದ್ದ ಪ್ರತಿಭಟನಕಾರರು ಹೆದ್ದಾರಿಯಲ್ಲಿ ನಿಂತಿದ್ದ ಬಸ್ಗಳಿಗೆ ಬೆಂಕಿ ಹಚ್ಚಿದರು. 15ಕ್ಕೂ ಹೆಚ್ಚು ಬಸ್ಗಳು ಸುಟ್ಟುಕರಕಲಾದವು.
ನಂತರ ಜಿಲ್ಲಾ ಕೇಂದ್ರವನ್ನು ತಲುಪಿದ ಪ್ರತಿಭಟನಕಾರರು, ಹಲವು ಅಂಗಡಿಗಳಿಗೆ ಬೆಂಕಿ ಹಚ್ಚಿದರು. ಜಿಲ್ಲೆಯ ಬಹುತೇಕ ಎಲ್ಲಾ ಪ್ರಮುಖ ರಸ್ತೆಗಳಲ್ಲೂ ಟೈರ್ ಸುಟ್ಟು, ಸಂಚಾರಕ್ಕೆ ತಡೆ ಒಡ್ಡಲಾಗಿದೆ. ಅಘೋಷಿತ ಬಂದ್ ವಾತಾವರಣವಿದೆ.
ಮುರ್ಶಿದಾಬಾದ್ ಜಿಲ್ಲೆಯ ರೈಲು ನಿಲ್ದಾಣವೊಂದರಲ್ಲಿ ನಿಲ್ಲಿಸಿದ್ದ ಐದು ರೈಲುಬೋಗಿಗಳಿಗೆ ಪ್ರತಿಭಟನಕಾರರು ಬೆಂಕಿ ಹಚ್ಚಿದ್ದಾರೆ. ಬೋಗಿಗಳು ಸುಟ್ಟು ಕರಕಲಾಗಿವೆ.
20 ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.22ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.