ನವದೆಹಲಿ: ಮುಸ್ಲಿಮೇತರ ಅಕ್ರಮ ವಲಸಿಗರಿಗೆ ಧರ್ಮದ ಆಧಾರದಲ್ಲಿ ಭಾರತದ ಪೌರತ್ವ ನೀಡುವ ‘ಪೌರತ್ವ ತಿದ್ದುಪಡಿ ಮಸೂದೆ’ಗೆ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರ ಸಿಕ್ಕಿದ್ದು, ಇದು ಭಾರತದ ಸಂವಿಧಾನದ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಒಂದು ವೇಳೆ ಈ ಮಸೂದೆಯನ್ನು ಬೆಂಬಲಿಸಿದ್ದೇ ಆದಲ್ಲಿ ಅದು ದೇಶದ ಅಡಿಪಾಯವನ್ನು ಧ್ವಂಸ ಮಾಡಲು ಯತ್ನಿಸಿದಂತೆ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪೌರತ್ವ ತಿದ್ದುಪಡಿ ಮಸೂದೆಯು ಭಾರತದ ಸಂವಿಧಾನದ ಮೇಲಿನ ದಾಳಿಯಾಗಿದೆ. ಯಾರಾದರೂ ಈ ಮಸೂದೆಗೆ ಬೆಂಬಲ ಸೂಚಿಸಿದರೆ ಅದು ನಮ್ಮ ರಾಷ್ಟ್ರದ ಅಡಿಪಾಯದ ಮೇಲಿನ ದಾಳಿ ಮತ್ತು ಧ್ವಂಸಕ್ಕೆ ಯತ್ನಿಸಿದಂತಾಗುತ್ತದೆ ಎಂದು ಹೇಳಿದ್ದಾರೆ.
The #CAB is an attack on the Indian constitution. Anyone who supports it is attacking and attempting to destroy the foundation of our nation.
ಮೂಲಗಳ ಪ್ರಕಾರ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಮಸೂದೆಯು ಬುಧವಾರ ರಾಜ್ಯಸಭೆ ಮುಂದೆ ಬರಲಿದೆ. ಲೋಕಸಭೆಯಲ್ಲಿ ಹಾಜರಿದ್ದ 391 ಸದಸ್ಯರ ಪೈಕಿ ಮಸೂದೆ ಪರವಾಗಿ 293 ಸದಸ್ಯರು ಮತ ಹಾಕಿದರೆ, ಮಸೂದೆ ವಿರುದ್ಧವಾಗಿ 82 ಮತಗಳು ಚಲಾವಣೆಯಾಗಿದ್ದವು.
ಪೌರತ್ವ(ತಿದ್ದುಪಡಿ)ಮಸೂದೆ 2019ರ ಮೂಲಕ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನ ದೇಶಗಳಲ್ಲಿ ಧಾರ್ಮಿಕ ದೌರ್ಜನ್ಯಕ್ಕೆ ಒಳಗಾಗಿ ವಲಸೆ ಬಂದಿರುವ ಮುಸ್ಲಿಮೇತರ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರೈಸ್ತ ಸಮುದಾಯದ ನಿರಾಶ್ರಿತರಿಗೆ ಭಾರತೀಯ ನಾಗರಿಕತ್ವ ಸಿಗಲಿದೆ.
245 ಸದಸ್ಯರಿರುವ ರಾಜ್ಯಸಭೆಯಲ್ಲಿ ಮೋದಿ ಸರ್ಕಾರವು ಮಸೂದೆಗೆ ಅಂಗೀಕಾರ ಪಡೆಯಲು 123 ಸದಸ್ಯರ ಬೆಂಬಲ ಅಗತ್ಯವಿದೆ.