ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ತಿದ್ದುಪಡಿ ಮಸೂದೆಗೆ ತೀವ್ರ ವಿರೋಧ

ಕೇಂದ್ರ ಸಂಪುಟಸಭೆಯಲ್ಲಿ ತೀರ್ಮಾನ * ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೋಂದಣಿಯಿಂದ ರಕ್ಷಣೆ
Last Updated 4 ಡಿಸೆಂಬರ್ 2019, 19:45 IST
ಅಕ್ಷರ ಗಾತ್ರ

ನವದೆಹಲಿ: ಮುಸ್ಲಿಮೇತರ ವಲಸಿಗರು ಮತ್ತು ನಿರಾಶ್ರಿತರಿಗೆ ಧರ್ಮದ ಆಧಾರದಲ್ಲಿ ಭಾರತದ ಪೌರತ್ವ ನೀಡಲು ಅವಕಾಶ ಮಾಡಿಕೊಡುವ‘ಪೌರತ್ವ ತಿದ್ದುಪಡಿ ಮಸೂದೆ–2019’ನ್ನು ಈಗ ನಡೆಯುತ್ತಿರುವ ಸಂಸತ್ತಿನ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ.

ಪಾಕಿಸ್ತಾನ, ಆಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶಗಳಿಂದ ಭಾರತಕ್ಕೆ ವಲಸೆ ಬಂದಿರುವ ಹಿಂದೂ, ಸಿಖ್‌, ಬೌದ್ಧ, ಜೈನ್‌, ಪಾರ್ಸಿ ಮತ್ತು ಕ್ರೈಸ್ತ ಧರ್ಮೀಯರಿಗೆ ಭಾರತದ ಪೌರತ್ವ ನೀಡಲು ಈ ತಿದ್ದುಪಡಿಯು ಅವಕಾಶ ಮಾಡಿಕೊಡಲಿದೆ.

‘ಈ ಸಮುದಾಯದ ಜನರು ಯಾವುದೇ ರೀತಿಯ ದಾಖಲೆ ಹೊಂದಿಲ್ಲದೇ ಇದ್ದರೂ ಅವರಿಗೆ ಭಾರತದ ಪೌರತ್ವ ದೊರೆಯಲಿದೆ’ ಎಂದು 2019ರ ಜನವರಿಯಲ್ಲಿ ಲೋಕಸಭೆಯಲ್ಲಿ ಮಂಡಿಸಲಾಗಿದ್ದ‘ಪೌರತ್ವ ತಿದ್ದುಪಡಿ ಮಸೂದೆ–2019’ರಲ್ಲಿ ವಿವರಿಸಲಾಗಿತ್ತು. ಈಗ ಮತ್ತೆ ಅದೇ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ, ಮಸೂದೆಯಈ ಅಂಶಕ್ಕೆ ತಿದ್ದುಪಡಿ ತರಲಾಗಿದೆಯೇ ಇಲ್ಲವೇ ಎಂಬುದರ ವಿವರ ಬಹಿರಂಗವಾಗಿಲ್ಲ.

‘ಗುರುವಾರ ಇಲ್ಲವೇ ಶುಕ್ರವಾರ ಈ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸುತ್ತೇವೆ. ಆಗ ಅದರ ಪೂರ್ಣ ವಿವರ ಗೊತ್ತಾಗಲಿದೆ’ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್ ಹೇಳಿದ್ದಾರೆ.

2024ರ ಒಳಗೆ ಕೇಂದ್ರ ಸರ್ಕಾರವು ದೇಶದಾದ್ಯಂತ ಅನುಷ್ಠಾನಕ್ಕೆ ತರಲು ಹೊರಟಿರುವ ರಾಷ್ಟ್ರೀಯ ಪೌರತ್ವ ನೋಂದಣಿಯಿಂದ ಈ ಆರೂ ಸಮುದಾಯದ ವಲಸಿಗರಿಗೆ ರಕ್ಷಣೆ ನೀಡಲಿದೆ.

ವಿರೋಧ ಪಕ್ಷಗಳಿಂದ ತೀವ್ರ ವಿರೋಧ

‘ಪೌರತ್ವ ತಿದ್ದುಪಡಿ ಮಸೂದೆ’ಯನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸಂಪುಟವು ಒಪ್ಪಿಗೆ ನೀಡಿರುವುದಕ್ಕೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಈಶಾನ್ಯ ಭಾರತದ ರಾಜ್ಯಗಳಲ್ಲಿ ಹಲವೆಡೆ ಬುಧವಾರ ಸಂಜೆ ಪ್ರತಿಭಟನೆ ನಡೆದಿವೆ.

ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದಿಂದ ಭಾರತಕ್ಕೆ ವಲಸೆ ಬಂದಿರುವ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರೈಸ್ತ ಧರ್ಮೀಯರಿಗೆ ಭಾರತದ ಪೌರತ್ವ ನೀಡಲು ಈ ಮಸೂದೆಯು ಅವಕಾಶ ಮಾಡಿಕೊಡುತ್ತದೆ.

‘ಧರ್ಮದ ಆಧಾರದಲ್ಲಿ ಪೌರತ್ವವನ್ನು ನೀಡುವುದು ಸಂವಿಧಾನ ಬಾಹಿರ. ಅಲ್ಲದೆ, ಈ ಮಸೂದೆಯಿಂದ ಮುಸ್ಲಿಮರನ್ನು ಹೊರಗೆ ಇಡಲಾಗಿದೆ. ಮುಸ್ಲಿಮರನ್ನು ಭಾರತದಿಂದ ಹೊರದೂಡುವ ಸಲುವಾಗಿಯೇ ಈ ಮಸೂದೆ ತರಲಾಗುತ್ತಿದೆ’ ಎಂದು ಕಾಂಗ್ರೆಸ್‌ ಆರೋಪಿಸಿದೆ.

‘ಮಸೂದೆಯ‍ಪೂರ್ಣವಿವರವನ್ನು ಸರ್ಕಾರ ನೀಡಿದ ನಂತರ, ಮಸೂದೆಗೆ ಸಂಬಂಧಿಸಿದಂತೆ ನಮ್ಮ ನಿಲುವು ಏನು ಎಂಬುದನ್ನು ನಿರ್ಧರಿಸುತ್ತೇವೆ’ ಎಂದು ಲೋಕಸಭೆಯ ಕಾಂಗ್ರೆಸ್‌ ನಾಯಕ ಅಧಿರ್ ರಂಜನ್ ಚೌಧರಿ ಹೇಳಿದ್ದಾರೆ.

ಈಶಾನ್ಯ ರಾಜ್ಯಗಳ ಕಳವಳ:ಈ ಮಸೂದೆಯು ಕಾಯ್ದೆಯಾದರೆ, ಬಾಂಗ್ಲಾದಿಂದ ಈಶಾನ್ಯ ಭಾರತದ ರಾಜ್ಯಗಳಿಗೆ ವಲಸೆ ಬಂದಿರುವ ಹಿಂದೂಗಳಿಗೆ ಪೌರತ್ವ ದೊರೆಯುತ್ತದೆ. ಇದರಿಂದ ಈಶಾನ್ಯ ಭಾರತದ ಬುಡಕಟ್ಟು ಸಮುದಾಯಗಳ ಸಂಸ್ಕೃತಿಗೆ ಧಕ್ಕೆಯಾಗುತ್ತದೆ. ಇಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತದೆ ಎಂದು ಈಶಾನ್ಯ ಭಾರತದ ರಾಜ್ಯಗಳ ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ.

ಈಶಾನ್ಯ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ಮಿತ್ರಪಕ್ಷಗಳೂ ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆ.

ಸಂಪುಟದ ಇತರ ತೀರ್ಮಾನಗಳು

* ಭಾರತದ ನಾಗರಿಕರ ವೈಯಕ್ತಿಕ ವಿವರ ಸಂಗ್ರಹ ಮತ್ತು ಬಳಕೆಗೆ ನಿಯಮಾವಳಿಗಳನ್ನು ಜಾರಿಗೆ ತರುವ ದತ್ತಾಂಶ ರಕ್ಷಣಾ ಮಸೂದೆಯನ್ನು ಸಂಸತ್ತಿನ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ

* ವೃದ್ಧಾಶ್ರಮಗಳ ನೋಂದಣಿ, ಕಾರ್ಯನಿರ್ವಹಣೆಯಲ್ಲಿ ಏಕರೂಪತೆ ತರುವ ಮತ್ತು ಲಭ್ಯವಿರಬೇಕಾದ ಕನಿಷ್ಠ ಸೌಲಭ್ಯಗಳನ್ನು ನಿಗದಿಪಡಿಸುವ ‘ಹಿರಿಯ ನಾಗರಿಕರ (ತಿದ್ದುಪಡಿ) ಮಸೂದೆ’ಯನ್ನು ಅಧಿವೇಶನದಲ್ಲಿ ಮಂಡಿಸಲು ಒಪ್ಪಿಗೆ

* ದೆಹಲಿಯ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ, ಶ್ರೀ ಲಾಲ್‌ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ಮತ್ತು ತಿರುಪತಿಯರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠಗಳಿಗೆ ಕೇಂದ್ರೀಯ ವಿಶ್ವವಿದ್ಯಾಲಯದ ಸ್ಥಾನ ನೀಡಲು ಕೇಂದ್ರ ಒಪ್ಪಿಗೆ

ಲೋಕಸಭೆ, ವಿಧಾನಸಭೆಗಳ ಮೀಸಲಾತಿ ವಿಸ್ತರಣೆ

ಲೋಕಸಭೆಯಲ್ಲಿ ಮತ್ತು ವಿಧಾನಸಭೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಈಗ ಇರುವ ಮೀಸಲಾತಿಯು 2020ರ ಜನವರಿ 25ಕ್ಕೆ ಕೊನೆಯಾಗುತ್ತದೆ. ಈ ಮೀಸಲಾತಿಯನ್ನು 2030ರ ಜನವರಿ 25ರವರೆಗೆ ವಿಸ್ತರಿಸಲು ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.

ಆದರೆ, ಲೋಕಸಭೆಗೆ ಇಬ್ಬರು ಆಂಗ್ಲೊ–ಇಂಡಿಯನ್‌ ಸದಸ್ಯರ ನಾಮನಿರ್ದೇಶನಕ್ಕೆ ಇದ್ದ ಅವಕಾಶವನ್ನು ಕೊನೆಗೊಳಿಸಲು ನಿರ್ಧರಿಸಿದೆ. ಈ ಸಮುದಾಯಕ್ಕೆ ನೀಡಿದ್ದ ಮೀಸಲಾತಿ ಸಹ 2020ರ ಜನವರಿ 25ಕ್ಕೆ ಕೊನೆಯಾಗುತ್ತಿದೆ. ‘ಈ ಸಮುದಾಯದ ಜನರು ಸುಸ್ಥಿತಿಯಲ್ಲಿ ಇದ್ದಾರೆ. ಹೀಗಾಗಿ ಅವರಿಗೆ ಮೀಸಲಾತಿಯ ಅವಶ್ಯಕತೆ ಇಲ್ಲ. ಅಗತ್ಯಬಿದ್ದರೆ ಮತ್ತೆ ಮೀಸಲಾತಿ ನೀಡಲು ಅವಕಾಶವಿದೆ. ಈ ಸಂಬಂಧ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಇದೇ ಆಧಿವೇಶನದಲ್ಲಿ ಮಂಡಿಸಲಾಗುತ್ತದೆ’ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT