ನವದೆಹಲಿ: ಕನ್ನಡ ಭಾಷೆ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೇಂದ್ರಕ್ಕೆ ಸಲ್ಲಿಸಲಿರುವ ಮನವಿಯಲ್ಲಿ ಸಂಘ ಪರಿವಾರದ ನಿರ್ಣಯದ ಉಲ್ಲೇಖ ಇರುವುದನ್ನು ಖಂಡಿಸಿದ ಕಾಂಗ್ರೆಸ್ ಸಂಸದರು ಬುಧವಾರ ಇಲ್ಲಿ ಆಯೋಜಿಸಿದ್ದ ಸಭೆಯನ್ನು ಬಹಿಷ್ಕರಿಸಿದರು.
‘ಕನ್ನಡಕ್ಕಾಗಿ ದಶಕಗಳಿಂದ ಹೋರಾಟ ನಡೆಸಿರುವ ಅನೇಕ ಸಂಘಟನೆಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ನ ಸಮ್ಮೇಳನಗಳಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಪ್ರಸ್ತಾಪಿಸದ ಪ್ರಾಧಿಕಾರದ ನಿಲುವನ್ನು ಖಂಡಿಸಿ ಸಭಾತ್ಯಾಗ ಮಾಡಲಾಗಿದೆ’ ಎಂದು ಎಲ್.ಹನುಮಂತಯ್ಯ ಹೇಳಿದರು.
ಉಲ್ಲೇಖ ತಪ್ಪಲ್ಲ:ಕನ್ನಡನಾಡು, ನುಡಿ, ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುವಂತೆ ಕೋರಲಾಗಿದೆ. ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ಕಡ್ಡಾಯವಾಗಿ ದೊರೆಯಬೇಕು ಎಂಬ ಬೇಡಿಕೆ ಇರುವ ಆರ್ಎಸ್ಎಸ್ನ ನಿರ್ಣಯವನ್ನು ಉಲ್ಲೇಖಿಸಿದ್ದರಲ್ಲಿ ತಪ್ಪಿಲ್ಲ ಎಂದು ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಸಭೆಯ ನಂತರ ಸ್ಪಷ್ಟಪಡಿಸಿದರು.
ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರವು ಸಂಘ ಪರಿವಾರದ ನಿಲುವನ್ನು ಬೆಂಬಲಿಸುತ್ತದೆ ಎಂಬ ಕಾರಣಕ್ಕೆ ಮಾತೃಭಾಷೆಗೆ ಒತ್ತು ನೀಡಿರುವ ಆರ್ಎಸ್ಎಸ್ ನಿರ್ಣಯವನ್ನು ಮನವಿಯ ಜೊತೆ ಸೇರಿಸಿರುವುದು ಸೂಕ್ತವಾಗಿದೆ ಎಂದು ಪ್ರಾಧಿಕಾರದ ನಿಯೋಗದಲ್ಲಿದ್ದ ಪ್ರಕಾಶ್ ಬೆಳವಾಡಿ ಹೇಳಿದರು.