ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ನೋಟು ರದ್ದತಿ ನಿರ್ಧಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದೇ 9ರಂದು (ಶುಕ್ರವಾರ) ದೇಶವ್ಯಾಪಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.
ತುಘಲಕ್ ದರ್ಬಾರ್ (ಆಲೋಚನಾ ರಹಿತ) ಮಾದರಿಯಲ್ಲಿ ನೋಟು ರದ್ದತಿ ನಿರ್ಧಾರ ಕೈಗೊಂಡಿದ್ದರಿಂದ ಸಣ್ಣ ಉದ್ಯಮಗಳು ನಾಶವಾಗಿವೆ. ದೇಶದ ಆರ್ಥಿಕ ಸ್ಥಿತಿ ಅದೋಗತಿಗೆ ತಲುಪಿದೆ. ಹೀಗಾಗಿ, ನರೇಂದ್ರ ಮೋದಿ ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮನಿಷ್ ತಿವಾರಿ ಹೇಳಿದರು.
ಬಿಜೆಪಿ ಮತ್ತು ಅದರ ಸ್ನೇಹಿತರ ಕಪ್ಪು ಹಣವನ್ನು ಬಿಳಿಯಾಗಿಸಲು ನೋಟು ರದ್ದತಿ ನಿರ್ಧಾರವನ್ನು ನರೇಂದ್ರ ಮೋದಿ ಕೈಗೊಂಡರು. ಹೀಗಾಗಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ‘ಮೋದಿಯವರೇ ಉತ್ತರಿಸಿ (ಜವಾಬ್ ದೋ ಮೋದಿಜೀ)’ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಲ್ಹೋಟ್ ರಾಜ್ಯ ಘಟಕಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.