ನವದೆಹಲಿ: ಕೊರೊನಾ ವೈರಸ್ ಸೋಂಕು (ಕೋವಿಡ್–19) ಪ್ರಕರಣಗಳು ದಾಖಲಾಗಿರುವ ವಿವಿಧ ರಾಜ್ಯಗಳ 75 ಜಿಲ್ಲೆಗಳನ್ನು ಮಾರ್ಚ್ 31ರವರೆಗೆ ಸಂಪೂರ್ಣ ಲಾಕ್ಡೌನ್ ಮಾಡಲು ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ನಿರ್ಧರಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಂತರರಾಜ್ಯ ಬಸ್ ಸೇವೆಯನ್ನೂ ಮಾರ್ಚ್ 31ರವರೆಗೆ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಕರ್ನಾಟಕ, ಮಹಾರಾಷ್ಟ್ರ, ಪಂಜಾಬ್, ತಮಿಳುನಾಡು, ಕೇರಳ, ಉತ್ತರ ಪ್ರದೇಶ ಸೇರಿದಂತೆ 23 ರಾಜ್ಯಗಳ 75 ಜಿಲ್ಲೆಗಳಿಗೆ ಇದು ಅನ್ವಯವಾಗಲಿದೆ.
ಪ್ರಧಾನಿಯವರ ಮುಖ್ಯ ಕಾರ್ಯದರ್ಶಿ ಮತ್ತು ಸಚಿವಸಂಪುಟ ಕಾರ್ಯದರ್ಶಿ ಜತೆಗೆ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.
ಕೋವಿಡ್ ಹರಡದಂತೆ ತಡೆಯುವ ನಿಟ್ಟಿನಲ್ಲಿ ಮಾರ್ಚ್ 31ರವರೆಗೆ ತೀರಾ ಅವಶ್ಯವಲ್ಲದ ಪ್ರಯಾಣ ನಿರ್ಬಂಧಿಸುವುದು ಮತ್ತು ಅಂತರರಾಜ್ಯ ಬಸ್ ಸೇವೆ ಸ್ಥಗಿತಗೊಳಿಸುವ ಬಗ್ಗೆ ಒಮ್ಮತಕ್ಕೆ ಬರಲಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.