ಲಖನೌ: ವಲಸೆ ಕಾರ್ಮಿಕರ ಮೇಲೆ ಸೋಂಕುನಿವಾರಕ ರಾಸಾಯನಿಕ ಸಿಂಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಆದೇಶಿಸಿದ್ದಾರೆ.
ಘಟನೆ ಬಗ್ಗೆ ಮುಖ್ಯಮಂತ್ರಿಗಳು ಆಘಾತ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳು ಇನ್ನು ಮುಂದೆ ನಡೆಯದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ ಎಂದು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್ ಅವಸ್ಥಿ ತಿಳಿಸಿದ್ದಾರೆ.
ದೇಶದಾದ್ಯಂತ ಲಾಕ್ಡೌನ್ ಇರುವ ಹಿನ್ನೆಲೆಯಲ್ಲಿ ದೆಹಲಿ ಸೇರಿದಂತೆ ಬೇರೆ ರಾಜ್ಯಗಳಿಂದ ಉತ್ತರ ಪ್ರದೇಶಕ್ಕೆ ವಾಪಸಾದ ವಲಸೆ ಕಾರ್ಮಿಕರ ಮೇಲೆ ಸೋಮವಾರ ಬರೇಲಿಯಲ್ಲಿ ಸೋಂಕುನಿವಾರಕ ರಾಸಾಯನಿಕ ಸಿಂಪಡಿಸಲಾಗಿತ್ತು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ರಾಸಾಯನಿಕ ಸಂಪಡಿಸುತ್ತಿರುವ ವಿಡಿಯೊ ಟ್ವಿಟರ್ನಲ್ಲಿ ವೈರಲ್ ಆಗಿತ್ತು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಅನೇಕ ರಾಜಕೀಯ ಮುಖಂಡರು ರಾಸಾಯನಿಕ ಸಿಂಪಡಿಸಿದ್ದನ್ನು ಖಂಡಿಸಿದ್ದರು.