ನವದೆಹಲಿ: ಸ್ವಾಮಿನಾಥನ್ ವರದಿ ಜಾರಿ, ಪ್ರಧಾನ ಮಂತ್ರಿ ರಾಷ್ಟ್ರೀಯ ಫಸಲ್ ಬಿಮಾ (ಬೆಳೆ ವಿಮೆ) ಯೋಜನೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ರಾಷ್ಟ್ರದ ವಿವಿಧೆಡೆಯಿಂದ ಬಂದಿರುವ ರೈತರು ಇಲ್ಲಿನ ರಾಮಲೀಲಾ ಮೈದಾನದಲ್ಲಿ ಗುರುವಾರ ಪ್ರತಿಭಟನೆ ಆರಂಭಿಸಿದರು.
ಬೆಂಬಲಬೆಲೆ ಯೋಜನೆ ಅಡಿ ರೈತರ ಉತ್ಪನ್ನಗಳನ್ನು ಖರೀದಿಸಲು ಆಯಾ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ವರ್ಷವಿಡೀ ಖರೀದಿ ಕೇಂದ್ರ ತೆರೆಯುವ ಮೂಲಕ ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು. ಬೆಂಬಲಬೆಲೆಗೆ ನಿಗದಿಪಡಿಸಲಾದ ಆವರ್ತನಿಧಿಗೆ ಸೂಕ್ತ ಅನುದಾನವನ್ನು ರಾಜ್ಯ ಸರ್ಕಾರಗಳಿಗೆ ಮಂಜೂರು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ರೈತರ ಸಮಸ್ಯೆಗಳನ್ನು ಚರ್ಚಿಸುವುದಕ್ಕಾಗಿಯೇ 21 ದಿನಗಳ ಸಂಸತ್ ಅಧಿವೇಶನ ಕರೆಯಬೇಕೆಂಬುದು ಇನ್ನೊಂದು ಪ್ರಮುಖ ಬೇಡಿಕೆಯಾಗಿದೆ.
ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ರೈತರ ಸಾಲವನ್ನೂ ಮನ್ನಾ ಮಾಡಬೇಕು. ಕೇಂದ್ರ ಸರ್ಕಾರವು ಉದ್ಯಮಿಗಳ ಬೆಂಬಲಕ್ಕೆ ನಿಲ್ಲದೇ ದೇಶದ ರೈತರ ಹಿತ ಕಾಯಬೇಕು ಎಂದು ರೈತರು ಆಗ್ರಹಿಸಿದರು.
‘ಚುನಾವಣೆಯ ಪ್ರಣಾಳಿಕೆಯಲ್ಲಿ ಭರವಸೆ ನೀಡಿರುವಂತೆ ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರಬೇಕು. ಇಲ್ಲವಾದರೆ ಬಿಜೆಪಿ ನೇತೃತ್ವದ ಸರ್ಕಾರ ರೈತರ ಪರ ಇಲ್ಲ ಎಂಬುದಾಗಿ ಪ್ರಧಾನಿ ಘೋಷಿಸಬೇಕು’ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಆಗ್ರಹಿಸಿದರು.
ರಾಜ್ಯ ರೈತ ಸಂಘದ ಮುಖಂಡ ಚಾಮರಸ ಮಾಲಿಪಾಟೀಲ, ರಾಮಣ್ಣ ಕೆಂಚಳ್ಳಿ, ಮಾಲತೇಶ ಪರಪ್ಪನವರ, ಅಡಿವೆಪ್ಪ ಆಲದಕಟ್ಟಿ, ಶಿವಬಸಪ್ಪ ಗೋವಿ, ಜಯಶಂಕರ ತಿಮ್ಮಯ್ಯನವರ, ವೀರಸಂಗಯ್ಯ ಸೇರಿದಂತೆ ರಾಜ್ಯದ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.