ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಇಲ್ಲಿ ಶುಕ್ರವಾರ ನಡೆದ ಬಿಜೆಪಿಯ ಪರಿಶಿಷ್ಟ ಪಂಗಡದ ಸಮಾವೇಶದಲ್ಲಿ ಅವರು ಮಾತನಾಡಿದರು.‘ಮೈಸೂರಿನಲ್ಲಿ ಕೊಲೆಗೀಡಾದ ಬಿಜೆಪಿ ಕಾರ್ಯಕರ್ತ ರಾಜು ಅವರ ಕುಟುಂಬದವರಿಗೆ ನಾವು ಒಂದು ಪೈಸೆಯನ್ನೂ ನೀಡಿಲ್ಲ. ಅವರ ಮನೆಗೆ ಭೇಟಿ ನೀಡಿದಾಕ್ಷಣ ದಿನೇಶ್ ಗುಂಡೂ ರಾವ್ ಚುನಾವಣಾ ಆಯೋಗಕ್ಕೆ ನೀತಿ ಸಂಹಿತೆ ಉಲ್ಲಂಘಿಸಿ, ಹಣ ನೀಡಿದ್ದಾರೆ ಎಂದು ದೂರು ನೀಡಿದ್ದಾರೆ. ಇದು ಹಸಿಸುಳ್ಳು’ ಎಂದು ಹೇಳಿದರು.‘ನಿನ್ನ ಯೋಗ್ಯತೆಗೆ ದಿಕ್ಕಾರ’ ಎಂದು ಕೂಗಿದ ಯಡಿಯೂರಪ್ಪ, ‘ಇಂತಹ ಸುಳ್ಳಿನ ರಾಜಕಾರಣ ಬಹಳ ದಿನ ನಡೆಯುವುದಿಲ್ಲ’ ಎಂದು ಕಿಡಿಕಾರಿದರು.