ನವದೆಹಲಿ: ಮುಂಬೈ, ಪುಣೆ, ಇಂದೋರ್, ಜೈಪುರ, ಕೋಲ್ಕತ್ತ ಮತ್ತು ಪಶ್ಚಿಮ ಬಂಗಾಳದ ಇತರ ಕೆಲವು ಪ್ರದೇಶಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪರಿಸ್ಥಿತಿ ಗಂಭೀರವಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.
ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವುದು, ಅಂತರ ಕಾಯ್ದುಕೊಳ್ಳದಿರುವುದು, ನಗರ ಪ್ರದೇಶಗಳಲ್ಲಿ ವಾಹನ ಓಡಾಟ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಇವುಗಳನ್ನು ಕಡ್ಡಾಯವಾಗಿ ನಿಯಂತ್ರಿಸಬೇಕು ಎಂದು ಎಲ್ಲ ರಾಜ್ಯ ಸರ್ಕಾರಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.
ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಸೋಮವಾರ 17,265ಕ್ಕೆ ಏರಿಕೆಯಾಗಿದೆ. ಮೃತರ ಸಂಖ್ಯೆ 543ಕ್ಕೆ ಏರಿಕೆಯಾಗಿದೆ.
ಮಧ್ಯಪ್ರದೇಶದ ಇಂದೋರ್, ಮಹಾರಾಷ್ಟ್ರದ ಮುಂಬೈ ಮತ್ತು ಪುಣೆ, ರಾಜಸ್ಥಾನದ ಜೈಪುರ, ಪಶ್ಚಿಮ ಬಂಗಾಳದ ಕೋಲ್ಕತ್ತ, ಹೌರಾ, ಪೂರ್ವ ಮೇದಿನಿಪುರ, ನಾರ್ತ್ 24 ಪರಗಣ, ಡಾರ್ಜೆಲಿಂಗ್, ಕಾಲಿಮ್ಪೋಂಗ್, ಜಲ್ಪೈಗುರಿಗಳಲ್ಲಿ ಪರಿಸ್ಥಿತಿ ತೀರಾ ಗಂಭೀರವಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸುತ್ತಿರುವ ಬಗ್ಗೆ ವರದಿಯಾಗಿದೆ. ಇದು ಸಾರ್ವಜನಿಕರ ಆರೋಗ್ಯಕ್ಕೆ ಅಪಾಯಕಾರಿ. ನಿಯಮ ಉಲ್ಲಂಘನೆಯಿಂದ ಕೋವಿಡ್ ಹರಡುವಿಕೆ ಹೆಚ್ಚುವ ಅಪಾಯವಿದೆ ಎಂದು ಸಚಿವಾಲಯ ಎಚ್ಚರಿಕೆ ನೀಡಿದೆ.
ಪರಿಸ್ಥಿತಿ ಗಂಭೀರವಾಗಿರುವ ಪ್ರದೇಶಗಳ ಬಗ್ಗೆ ಪರಿಶೀಲನೆ ನಡೆಸಲು ಮತ್ತು ರಾಜ್ಯ ಸರ್ಕಾರಗಳಿಗೆ ಅಗತ್ಯ ನಿರ್ದೇಶನ ನೀಡಲು ಅಂತರ ಸಚಿವಾಲಯ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಸರ್ಕಾರಕ್ಕೆ ವರದಿ ಸಲ್ಲಿಸಲಿವೆ ಎಂದೂ ಸಚಿವಾಲಯ ಹೇಳಿದೆ.