ಮುಂಬೈ: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ವಿಮಾನ ಸಿಗದೇ ಸಿಂಗಾಪುರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವ ಭರವಸೆಯನ್ನು ಮುಖ್ಯಮಂತ್ರಿ ಉದ್ದವ್ ಠಾಕ್ರೆ ನೀಡಿದ್ದಾರೆ.
ಈ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿಯು ಗುರುವಾರ ಹೇಳಿಕೆ ನೀಡಿದೆ. ಸಿಂಗಾಪುರದಲ್ಲಿರುವ ವಿದ್ಯಾರ್ಥಿಗಳ ಕಾಳಜಿಯನ್ನು ಭಾರತೀಯ ರಾಯಭಾರ ಕಚೇರಿಯು ವಹಿಸಿಕೊಳ್ಳಲಿದೆ ಎಂದು ತಿಳಿಸಿದೆ.
‘ಮುಖ್ಯಮಂತ್ರಿಯವರು ಸಿಂಗಾಪುರದಲ್ಲಿರುವ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದಾರೆ. ಭಾರತಕ್ಕೆ ಸುರಕ್ಷಿತವಾಗಿ ಕರೆತರುವ ಭರವಸೆಯನ್ನು ಅವಳಿಗೆ ನೀಡಿದ್ದಾರೆ’ ಎಂದು ಮುಖ್ಯಮಂತ್ರಿ ಕಚೇರಿ ಸ್ಪಷ್ಟಪಡಿಸಿದೆ.
ಸಿಂಗಾಪುರದಲ್ಲಿ ಸಿಲುಕಿರುವ ರಾಜ್ಯದ 50 ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಲು ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಮಹಾರಾಷ್ಟ್ರ ಸಚಿವ ಉದಯ್ ಸಮಂತ್ ಭರವಸೆ ನೀಡಿದ್ದಾರೆ.
ದೇಶದಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ 170ಕ್ಕೆ ಏರಿದ್ದು, ಕರ್ನಾಟಕದಲ್ಲಿ 15 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.