ನವದೆಹಲಿ: 1984ರ ಸಿಖ್ ವಿರೋಧಿ ಗಲಭೆಯಂತೆ ಮತ್ತೊಂದು ಘಟನೆ ದೇಶದಲ್ಲಿ ನಡೆಯಲು ಬಿಡುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಬುಧವಾರ ಹೇಳಿದೆ.
ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದ ವಿಚಾರಣೆ ವೇಳೆ, ‘1984ರಲ್ಲಿ ಆದಂತೆ ಇನ್ನೊಂದು ಘಟನೆ ನಡೆಯಲು ಬಿಡಲಾರೆವು. ಗುಪ್ತಚರ ದಳದ ಅಧಿಕಾರಿಯೊಬ್ಬರ ಮೇಲೆ ದಾಳಿ ನಡೆದಿದೆ ಎಂಬ ವಿಚಾರ ತಿಳಿಯಿತು. ಇಂತಹ ಘಟನೆಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು’ ಎಂದು ನ್ಯಾಯಮೂರ್ತಿ ಮುರಳೀಧರ್ ಅವರು ಹೇಳಿದರು.
ಬಿಜೆಪಿ ನಾಯಕ ಕಪಿಲ್ ಮಿಶ್ರಾ ನೀಡಿದ್ದಾರೆ ಎನ್ನಲಾದ ವಿವಾದಿತ ಹೇಳಿಕೆಗೆ ಸಂಬಂಧಿಸಿದ ವಿಡಿಯೊವನ್ನೂ ಕೋರ್ಟ್ ಪರಿಶೀಲನೆ ನಡೆಸಿದೆ.
ಗಲಭೆ ಪೀಡಿತ ಪ್ರದೇಶಗಳಿಗೆ ತೆರಳಿ ಜನರಲ್ಲಿ ವಿಶ್ವಾಸ ವೃದ್ಧಿಸುವ ಕೆಲಸ ಮಾಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಗಾಯಾಳುಗಳನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡುವಂತೆ ಪೊಲೀಸರಿಗೆ ಸೂಚಿಸಿದೆ.