ನವದೆಹಲಿ : ವಿಪರೀತ ಜ್ವರ ಹಾಗೂ ಆಮ್ಲಜನಕ ಪ್ರಮಾಣದಲ್ಲಿ ತೀವ್ರ ಕುಸಿತ ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಅವರನ್ನು ಕೋವಿಡ್–19 ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿನೆಗೆಟಿವ್ ಬಂದಿದೆಎಂದು ವೈದ್ಯರು ತಿಳಿಸಿದ್ದಾರೆ.
‘ವಿಪರೀತ ಜ್ವರ ಹಾಗೂ ದೇಹದಲ್ಲಿ ಆಮ್ಲಜನಕ ಪ್ರಮಾಣ ಕುಸಿದ ಕಾರಣ, ಕೋವಿಡ್–19 ರೋಗಿಗಳ ಚಿಕಿತ್ಸೆಗಾಗಿಯೇ ದೆಹಲಿ ಸರ್ಕಾರ ಮೀಸಲಿಟ್ಟಿರುವ ರಾಜೀವ್ ಗಾಂಧಿ ಸೂಪರ್ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರ ರಾತ್ರಿ ದಾಖಲಾಗಿದ್ದೇನೆ’ ಎಂದು ಸಚಿವ ಜೈನ್ ಟ್ವೀಟ್ ಮಾಡಿದ್ದಾರೆ.
ಸಚಿವ ಜೈನ್ ಶೀಘ್ರವೇ ಗುಣಮುಖರಾಗಲಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
‘ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸದೇ ಹಗಲೂ–ರಾತ್ರಿ ಎನ್ನದೇ ಜನರ ಸೇವೆ ಮಾಡಿದ್ದೀರಿ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಿ ಮತ್ತು ಶೀಘ್ರ ಗುಣಮುಖರಾಗಿ’ ಎಂದು ಕೇಜ್ರಿವಾಲ್ ಟ್ವೀಟ್ ಮೂಲಕ ಹಾರೈಸಿದ್ದಾರೆ.