ನವದೆಹಲಿ: ‘ತಮ್ಮ ವಿರುದ್ಧ ಎರಡು ಕ್ರಿಮಿನಲ್ ಪ್ರಕರಣಗಳು ಬಾಕಿ ಇರುವ ವಿಷಯವನ್ನು ಚುನಾವಣಾ ಅಫಡವಿಟ್ನಲ್ಲಿ ಉಲ್ಲೇಖಿಸದ ಆರೋಪ ಹೊತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ವಿಚಾರಣೆ ಎದುರಿಸಬೇಕು’ ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫಡಣವೀಸ್ ಅವರನ್ನು ದೋಷಮುಕ್ತರನ್ನಾಗಿ ಮಾಡಿ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ, ಅನಿರುದ್ಧ ಬೋಸ್ ಅವರಿರುವ ನ್ಯಾಯಪೀಠ ರದ್ದುಗೊಳಿಸಿತು.
ವಂಚನೆ ಹಾಗೂ ಫೋರ್ಜರಿ ಅರೋಪದ ಮೇಲೆ ಫಡಣವೀಸ್ ವಿರುದ್ಧ 1996 ಹಾಗೂ 1998ರಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಆದರೆ, ದೋಷಾರೋಪ ಪಟ್ಟಿಯನ್ನು ಸಲ್ಲಿಸಿರಲಿಲ್ಲ.
ರಾಜೀನಾಮೆಗೆ ಆಗ್ರಹ: ‘ಬಾಂಬೈ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಪಡಿಸಿರುವ ಕಾರಣ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ತಕ್ಷಣ ರಾಜೀನಾಮೆ ನೀಡಬೇಕು. ಅವರು ರಾಜಕೀಯವನ್ನೂ ತೊರೆಯಬೇಕು’ ಎಂದು ಎನ್ಸಿಪಿ ವಕ್ತಾರ ನವಾಬ್ ಮಲಿಕ್ ಆಗ್ರಹಿಸಿದ್ದಾರೆ.
ತಪ್ಪು ಗ್ರಹಿಕೆ: ಸಿಎಂಒ
‘ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ವಿರುದ್ಧ ವಿಚಾರಣೆಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ’ ಎಂಬುದು ತಪ್ಪು. ಇದಕ್ಕೆ ಹೆಚ್ಚಿನ ಮಹತ್ವ ಕೊಡಬೇಕಾಗಿಲ್ಲ’ ಎಂದು ಮುಖ್ಯಮಂತ್ರಿಗಳ ಕಚೇರಿ (ಸಿಎಂಒ)ಮಂಗಳವಾರ ಹೇಳಿದೆ.
ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಈ ಪ್ರಕಟಣೆ ನೀಡಿರುವ ಅವರ ಕಚೇರಿ, ‘ಫಡಣವೀಸ್ ಅವರು ಸಾರ್ವಜನಿಕ ಜೀವನದಲ್ಲಿ ಮುಂದುವರಿಯುವುದು ಅಥವಾ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೂ ಈ ತೀರ್ಪುಗೂ ಯಾವುದೇ ಸಂಬಂಧ ಇಲ್ಲ’ ಎಂದು ಅಭಿಪ್ರಾಯಪಟ್ಟಿದೆ.
‘ಫಡಣವೀಸ್ ವಿರುದ್ಧದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯದಲ್ಲಿಯೇ ಹೊಸದಾಗಿ ವಿಚಾರಣೆ ನಡೆಸಬೇಕು ಎಂಬುದಾಗಿ ಸುಪ್ರೀಂಕೋರ್ಟ್ ಸೂಚಿಸಿದೆ’ ಎಂದೂ ಸಿಎಂಒ ಪ್ರಕಟಣೆ ತಿಳಿಸಿದೆ.