ನವದೆಹಲಿ:ಅಪರಾಧ ಪ್ರಕರಣಗಳ ಮಾಹಿತಿಯನ್ನು ಚುನಾವಣಾ ಅಫಿಡವಿಟ್ನಲ್ಲಿ ಸಲ್ಲಿಸದ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಸುಪ್ರೀಂ ಕೋರ್ಟ್ ಗುರುವಾರನೋಟಿಸ್ ನೀಡಿದೆ.
ಫಡಣವೀಸ್ ವಿರುದ್ಧ ವಂಚನೆ ಮತ್ತು ಮಾನನಷ್ಟ ಪ್ರಕರಣದ ವಿಚಾರಣೆ ಬಾಕಿ ಇದೆ. ಆದರೆ ಈ ವಿಚಾರವನ್ನು ಅವರು 2014ರಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ಉಲ್ಲೇಖಿಸಿಲ್ಲ. ಹೀಗಾಗಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ವಕೀಲ ಸತೀಶ್ ಉಕೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಕೆ.ಎಂ.ಜೋಸೆಫ್ ಅವರಿದ್ದ ನ್ಯಾಯಪೀಠ ಫಡಣವೀಸ್ ಅವರಿಂದ ಪ್ರತಿಕ್ರಿಯೆ ಕೋರಿದೆ.
ಪ್ರಕರಣಕ್ಕೆ ಸಂಬಂಧಿಸಿಸಲ್ಲಿಕೆಯಾಗಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿತ್ತು. ನಂತರ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.
2015ರ ಸೆಪ್ಟೆಂಬರ್ನಲ್ಲಿ ಫಡಣವೀಸ್ ವಿರುದ್ಧ ಸತೀಶ್ ಉಕೆ ನಾಗ್ಪುರದ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ತಿರಸ್ಕೃತವಾಗಿತ್ತು. ನಂತರ ಸೆಷನ್ಸ್ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಪ್ರಕರಣಕ್ಕೆ ಸಂಬಂಧಿಸಿ ಮರು ವಿಚಾರಣೆ ನಡೆಸುವಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಸೆಷೆನ್ಸ್ ಕೋರ್ಟ್ ಸೂಚಿಸಿತ್ತು. ಇದರ ವಿರುದ್ಧ ಫಡಣವೀಸ್ ಅವರು ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಬಾಂಬೆ ಹೈಕೋರ್ಟ್ ತೀರ್ಪಿನ ವಿರುದ್ಧ ಉಕೆ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಫಡಣವೀಸ್ ಅವರು ‘ನಾಗ್ಪುರ ನೈಋತ್ಯ’ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.