ನವದೆಹಲಿ: ತಮ್ಮ ವಿರುದ್ಧ ದಾಖಲಾಗಿರುವ ಅಪರಾಧ ಪ್ರಕರಣಗಳ ಬಗ್ಗೆ ಜಾಹೀರಾತು ಪ್ರಕಟಿಸದ ಅಭ್ಯರ್ಥಿಗಳು ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸಬೇಕಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ. ಪ್ರತಿಸ್ಪರ್ಧಿಯ ವಿರುದ್ಧ ದಾಖಲಾಗಿರುವ ಅಪರಾಧ ಪ್ರಕರಣಗಳ ಬಗ್ಗೆ ತಪ್ಪು ಮಾಹಿತಿ ಪ್ರಕಟಿಸುವ ಅಭ್ಯರ್ಥಿಗಳು ದಂಡ ಪಾವತಿಸಬೇಕಾಗುತ್ತದೆ ಎಂದೂ ಆಯೋಗ ತಿಳಿಸಿದೆ.
ಮಧ್ಯ ಪ್ರದೇಶ, ರಾಜಸ್ಥಾನ, ಛತ್ತೀಸಗಡ, ಮಿಜೋರಾಂ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಈ ನಿಯಮ ಜಾರಿಗೆ ಬರಲಿದೆ.
ತಮ್ಮ ವಿರುದ್ಧದ ಅಪರಾಧ ಪ್ರಕರಣಗಳ ಬಗ್ಗೆ ಸುದ್ದಿ ವಾಹಿನಿಗಳು ಮತ್ತು ಪತ್ರಿಕೆಗಳಲ್ಲಿ ಚುನಾವಣಾ ಪ್ರಚಾರದ ಅವಧಿಯಲ್ಲಿ ಕನಿಷ್ಠ ಮೂರು ಬಾರಿ ಜಾಹೀರಾತು ನೀಡಬೇಕು ಎಂಬ ನಿಯಮವನ್ನು ಅಕ್ಟೋಬರ್ 10ರಂದು ಕಡ್ಡಾಯಗೊಳಿಸಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಆಯೋಗವು ಈ ಕ್ರಮ ಕೈಗೊಂಡಿದೆ.
ಈ ನಿರ್ದೇಶನಗಳ ಪ್ರಕಾರ, ರಾಜಕೀಯ ಪಕ್ಷಗಳು ಕೂಡ ತಮ್ಮ ಅಭ್ಯರ್ಥಿಗಳ ಮೇಲಿನ ಅಪರಾಧ ಪ್ರಕರಣಗಳ ಮಾಹಿತಿಯನ್ನು ಜಾಹೀರಾತು ಮೂಲಕ ಪ್ರಕಟಿಸಬೇಕು. ಪಕ್ಷಗಳು ಮತ್ತು ಅಭ್ಯರ್ಥಿಗಳು ಪ್ರಕಟಿಸುವ ಜಾಹೀರಾತಿನ ವೆಚ್ಚವನ್ನು ಅಭ್ಯರ್ಥಿಗಳ ಚುನಾವಣಾ ವೆಚ್ಚದ ಭಾಗವಾಗಿಪರಿಗಣಿಸಲಾಗುವುದು. ಯಾವುದೇ ಪ್ರಕರಣ ಇಲ್ಲದ ಅಭ್ಯರ್ಥಿಗಳು ಜಾಹೀರಾತು ಪ್ರಕಟಿಸುವ ಅಗತ್ಯ ಇಲ್ಲ ಎಂದೂ ಆಯೋಗ ಸ್ಪಷ್ಟಪಡಿಸಿದೆ.