ನವದೆಹಲಿ:ದಕ್ಷಿಣ ದೆಹಲಿಯ ಸಿಜಿಒ ಕಾಂಪ್ಲೆಕ್ಸ್ನಲ್ಲಿರುವ ಪಂಡಿತ್ ದೀನ್ ದಯಾಳ್ ಅಂತ್ಯೋದಯ ಭವನದ ಐದನೇ ಮಹಡಿಯಲ್ಲಿ ಬುಧವಾರ ಅಗ್ನಿ ಅನಾಹುತ ಸಂಭವಿಸಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.
ಸಿಐಎಸ್ಎಫ್ ಸಬ್ ಇನ್ಸ್ಪೆಕ್ಟರ್ ಎಂ.ಪಿ.ಗೋದಾರಾ (53) ಮೃತಪಟ್ಟವರು. ಸಾಮಾಜಿಕ ನ್ಯಾಯ ಸಚಿವಾಲಯದ ಕಚೇರಿಯಿದ್ದ ಅಂತಸ್ತಿನಲ್ಲಿ ಹೊಗೆ ಕಂಡ ಕೂಡಲೇ ಗೋದಾರ ಅವರು ಹಾಗೂ ಸಿಐಎಸ್ಎಫ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ತೆರವು ಕಾರ್ಯಾಚರಣೆ ನಡೆಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಷಾನಿಲ ಸೇವನೆಯಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದ ಗೋದಾರ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದೂ ಹೇಳಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.
11 ಅಂತಸ್ತಿನ ಕಟ್ಟಡದಲ್ಲಿ ಹಲವು ಸರ್ಕಾರಿ ಕಚೇರಿಗಳಿವೆ. ಸಾಮಾಜಿಕ ನ್ಯಾಯ ಸಚಿವಾಲಯದ ಹಲವು ಪ್ರಮುಖ ಕಡತಗಳು ಹಾಗೂ ದಾಖಲೆಗಳು ಭಸ್ಮವಾಗಿವೆ ಎನ್ನಲಾಗಿದೆ.