ಬೀಳಗಿ: ತಾಲ್ಲೂಕಿನ ಬಿಸನಾಳ ಗ್ರಾಮದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೆಯ ಪಂಚಾಯ್ತಿ ಕಟ್ಟಡದ ಸುತ್ತಲೂ ಅನೈರ್ಮಲ್ಯ ತಾಂಡವವಾಡುತ್ತಿದ್ದು, ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಪಂಚಾಯ್ತಿ ಕಟ್ಟಡವು ಮೂತ್ರ ವಿಸರ್ಜನೆಯ ತಾಣವಾಗಿದ್ದು, ಗಬ್ಬೆದ್ದು ನಾರುತ್ತಿದೆ. ಸ್ವಚ್ಛತೆ ನಿರ್ಮಾಣ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದರೂ ಇಲ್ಲಿ ಸಫಲವಾಗುತ್ತಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಾರೆ.
ಈ ಹಿಂದೆ ಗ್ರೂಫ್ ಗ್ರಾಮ ಪಂಚಾಯ್ತಿ ಇದ್ದಾಗ ಈ ಕಟ್ಟಡವನ್ನು ನಿರ್ಮಿಸಲಾಗಿದೆ. ಜನಸಂಖ್ಯೆಗನುಗುಣವಾಗಿ ಪಕ್ಕದ ತೆಗ್ಗಿ ಗ್ರಾಮಕ್ಕೆ ಕಟ್ಟಡ ಸ್ಥಳಾಂತರವಾದ ಮೇಲೆ ಈ ಕಟ್ಟಡ ಹಾಗೇ ಉಳಿದುಕೊಂಡಿದೆ. ಇಲ್ಲಿಯೇ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಕಟ್ಟಡದ ಕಾಮಗಾರಿ ಕೂಡಾ ನಡೆದಿದ್ದು, ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದು ಮಾತ್ರ ನಿಂತಿಲ್ಲ ಎಂಬುದು ಇಲ್ಲಿನ ನಿವಾಸಿಗಳ ಆರೋಪವಾಗಿದೆ.
ಕೂಡಲೇ ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸಬೇಕು. ಬಸ್ನಿಲ್ದಾಣದ ಸಮೀಪದಲ್ಲಿ ಮೂತ್ರಾಲಯ ಕಟ್ಟಡ ನಿರ್ಮಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಗ್ರಾಮದ ಗಂಗಾಧರ ನಾಯಿಕ ಒತ್ತಾಯಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.