ಬೆಂಗಳೂರು: ಯಲಹಂಕದ ಬಿ.ಎಂ.ಎಸ್ ವಾಸ್ತುಶಿಲ್ಪ ಕಾಲೇಜಿನ ಕಟ್ಟಡವನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ನಗರದಲ್ಲಿ ಗುರುವಾರ ಉದ್ಘಾಟಿಸಿದರು.
ಹೊಸ ಕಟ್ಟಡದಲ್ಲಿ ಗ್ರಂಥಾಲಯ, ಮಾಹಿತಿ ಮತ್ತು ಇ-ಕಲಿಕಾ ಕೇಂದ್ರ, ಕಾರ್ಯಾಗಾರ, ಅತ್ಯಾಧುನಿಕ ಸಂಶೋಧನಾ ಪ್ರಯೋಗಾಲಯ ಹಾಗೂ ವಸ್ತು ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬಸವರಾಜ ರಾಯರಡ್ಡಿ, ‘ರಾಜ್ಯದಲ್ಲಿ ಕೌಶಲ ಅಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರ ನಿರ್ಣಯ ಕೈಗೊಂಡಿದೆ. ಈ ಸಂಬಂಧ ಬಜೆಟ್ನಲ್ಲಿ ಅಧಿಕೃತವಾಗಿ ಘೋಷಿಸಲಾಗಿದೆ. ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಸ್ವಯಂ ಉದ್ಯೋಗದಲ್ಲಿ ತೊಡಗಿಕೊಳ್ಳಲು ಅವಕಾಶಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ’ ಎಂದರು.
‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ದಾಂಡೇಲಿಯಲ್ಲಿ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗಿದೆ. ಕೊಪ್ಪಳ ಹಾಗೂ ಮೈಸೂರಿನಲ್ಲೂ ಕೇಂದ್ರ ಸ್ಥಾಪಿಸಲಿದ್ದೇವೆ. ಪ್ರತಿ ಜಿಲ್ಲೆಗೂ ಈ ಸೌಲಭ್ಯ ವಿಸ್ತರಿಸಲಿದ್ದೇವೆ’ ಎಂದು ತಿಳಿಸಿದರು.
ಪ್ರಾಚೀನ ಹಾಗೂ ಮಧ್ಯಕಾಲೀನ ವಾಸ್ತುಶಿಲ್ಪಿಗಳು ಅದ್ಭುತವಾದ ಕಲಾಕೃತಿಗಳನ್ನು ರಚಿಸಿದ್ದಾರೆ. ಅನೇಕ ಕಟ್ಟಡ ಹಾಗೂ ಸ್ಮಾರಕಗಳನ್ನು ನಿರ್ಮಿಸಿದ್ದಾರೆ. ಸಾವಿರಾರು ವರ್ಷಗಳು ಉರುಳಿದರೂ ಅವುಗಳ ನೈಜ ಸ್ವರೂಪ ಹಾಳಾಗಿಲ್ಲ ಎಂದರು.