ಪಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ, ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್ಎಎಂ) ಮುಖ್ಯಸ್ಥ ಜೀತನ್ ರಾಮ್ ಮಾಂಝಿ ಎನ್ಡಿಎ ಮಿತ್ರಕೂಟದಿಂದ ಹೊರನಡೆದಿದ್ದು, ಮಹಾಮೈತ್ರಿ ಸೇರುವುದಾಗಿ ತಿಳಿಸಿದ್ದಾರೆ.
ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪತ್ರಿ ರಾಬ್ಡಿ ದೇವಿ ಜತೆ ಅವರ ನಿವಾಸದಲ್ಲಿ ಮಾತುಕತೆ ನಡೆಸಿದ ಬಳಿಕ ಮಾಂಝಿ ಈ ನಿರ್ಧಾರ ಕೈಗೊಂಡಿದ್ದಾರೆ.
ಬಿಹಾರದ ಮುಖ್ಯಮಂತ್ರಿ ನಿತಿಶ್ ಕುಮಾರ್ ಜತೆಗೆ ಭಿನ್ನಮತ ಉಂಟಾದ ಬಳಿಕ ಸ್ವಂತ ಪಕ್ಷ ಸ್ಥಾಪಿಸಿದ್ದ ಅವರು 2015ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎನ್ಡಿಎ ಸೇರಿದ್ದರು.
ರಾಜ್ಯಸಭೆಯ ಒಂದು ಸ್ಥಾನವನ್ನು ತಮ್ಮ ಪಕ್ಷಕ್ಕೆ ನೀಡಬೇಕೆಂಬ ಮಾಂಝಿ ಅವರ ಬೇಡಿಕೆಯನ್ನು ಎನ್ಡಿಎ ತಿರಸ್ಕರಿಸಿತ್ತು. ಹೀಗಾಗಿ ಅವರು ಮುಂದಿನ ಲೋಕಸಭೆ ಮತ್ತು ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಯನ್ನು ಬೆಂಬಲಿಸದಿರುವ ನಿರ್ಧಾರ ಕೈಗೊಂಡಿದ್ದಾರೆ.
ಮಾರ್ಚ್ 23ರಂದು ರಾಜ್ಯಸಭಾ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ಮಾರ್ಚ್ 11ರಂದು ಚುನಾವಣೆ ನಡೆಯಲಿದೆ.