ನವದೆಹಲಿ: ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿಯನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೊಳಿಸುವಂತೆ ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ರಾಜ್ಯದ 11 ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.
ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ, ಬೆಂಗಳೂರು, ದಾವಣಗೆರೆ, ಗುಲ್ಬರ್ಗಾ, ಮಂಗಳೂರು, ಮೈಸೂರು, ತುಮಕೂರು ವಿಶ್ವವಿದ್ಯಾಲಯಗಳು, ಕನ್ನಡ ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯ, ಕುವೆಂಪು ವಿ.ವಿ ಹಾಗೂ ಕರ್ನಾಟಕ ವಿಶ್ವವಿದ್ಯಾಲಯಗಳಿಗೆ ಈ ಸೂಚನೆ ನೀಡಲಾಗಿದೆ.
ಇತರ 20 ರಾಜ್ಯಗಳ 150 ವಿಶ್ವವಿದ್ಯಾಲಯಗಳಿಗೂ ಯುಜಿಸಿ ಸೋಮವಾರ ಈ ಸೂಚನೆ ನೀಡಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ 10ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕೆಲವು ರಾಜ್ಯಗಳು ನ್ಯಾಯಾಲಯದ ಮೆಟ್ಟಿಲೇರಿವೆ. ಇಂಥ ಸಂದರ್ಭದಲ್ಲೇ ಯುಜಿಸಿಯ ಈ ಆದೇಶ ಬಂದಿದೆ.