ನವದೆಹಲಿ: ಜಮ್ಮು–ಕಾಶ್ಮೀರದಲ್ಲಿ ಅತಿಕ್ರಮಿಸಿಕೊಂಡಿರುವ ಪ್ರದೇಶಗಳಿಂದ ತಕ್ಷಣವೇ ಹಿಂತೆರಳುವಂತೆ ಪಾಕಿಸ್ತಾನಕ್ಕೆ ಭಾರತ ಸೂಚಿಸಿದೆ.
ಗಿಲ್ಗಿಟ್–ಬಾಲ್ಟಿಸ್ತಾನದಲ್ಲಿ ಚುನಾವಣೆ ನಡೆಸುವಂತೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಅಲ್ಲಿನ ಸರ್ಕಾರಕ್ಕೆ ಈಚೆಗೆ ಆದೇಶಿಸಿತ್ತು. 2018ರ ಆದೇಶಕ್ಕೆ ತಿದ್ದುಪಡಿ ಮಾಡಿ ಹೊಸ ಆದೇಶ ನೀಡಲಾಗಿತ್ತು. ಇದಕ್ಕೆ ತೀವ್ರ ಆಕ್ಷೇಪ ಸೂಚಿಸಿರುವ ಭಾರತ, ತಕ್ಷಣವೇ ಅತಿಕ್ರಮಿತ ಪ್ರದೇಶಗಳಿಂದ ವಾಪಸ್ ತೆರಳುವಂತೆ ಹೇಳಿದೆ.
ಗಿಲ್ಗಿಟ್–ಬಾಲ್ಟಿಸ್ತಾನ ಸೇರಿದಂತೆ ಇಡೀ ಜಮ್ಮು–ಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಅಂಗ ಎಂದು ಪಾಕಿಸ್ತಾನಕ್ಕೆ ತಿಳಿಸಿರುವುದಾಗಿ ವಿದೇಶಾಂಗ ಸಚಿವಾಲಯ ಹೇಳಿದೆ.
‘ಪಾಕಿಸ್ತಾನದ ಹಿರಿಯ ರಾಜತಾಂತ್ರಿಕರ ಬಳಿ ಅಲ್ಲಿನ ಸುಪ್ರೀಂ ಕೋರ್ಟ್ ಆದೇಶದ ಕುರಿತು ಆಕ್ಷೇಪ ವ್ಯಕ್ತಪಡಿಸಲಾಗಿದೆ’ ಎಂದೂ ಸಚಿವಾಲಯ ತಿಳಿಸಿದೆ.
ಗಿಲ್ಗಿಟ್–ಬಾಲ್ಟಿಸ್ತಾನ ಪ್ರದೇಶಗಳನ್ನು ಪಾಕಿಸ್ತಾನ ಅಕ್ರಮವಾಗಿ ಅತಿಕ್ರಮಿಸಿಕೊಂದೆ. ಹೀಗಾಗಿ ಆ ಪ್ರದೇಶಗಳ ಮೇಲೆ ಪಾಕಿಸ್ತಾನಕ್ಕಾಗಲೀ ಆ ದೇಶದ ಸುಪ್ರೀಂ ಕೋರ್ಟ್ಗಾಗಲಿ ಯಾವುದೇ ಹಕ್ಕಿಲ್ಲ ಎಂದು ಸಚಿವಾಲಯ ಹೇಳಿದೆ.
‘ಪಾಕಿಸ್ತಾನದ ಕ್ರಮಗಳನ್ನು ಭಾರತವು ಸಂಪೂರ್ಣವಾಗಿ ತಿರಸ್ಕರಿಸುತ್ತದೆ. ಆ ದೇಶ ಅತಿಕ್ರಮಿಸಿಕೊಂಡಿರುವ ಜಮ್ಮು–ಕಾಶ್ಮೀರದ ಪ್ರದೇಶಗಳಲ್ಲಿ ಬದಲಾವಣೆ ತರಲು ಪ್ರಯತ್ನಿಸಲಾಗುತ್ತಿದೆ’ ಎಂದೂ ಸಚಿವಾಲಯ ತಿಳಿಸಿದೆ.