ನವದೆಹಲಿ: ಕೋವಿಡ್ ಬಿಕ್ಕಟ್ಟು ನಿರ್ವಹಿಸುವ ಸಲುವಾಗಿ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ರಾಷ್ಟ್ರೀಯ ಯೋಜನೆ ರೂಪಿಸಬೇಕೆಂದು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಒತ್ತಾಯಿಸಿದೆ.
ದೇಶವು ಜನರ ಲಾಕ್ಡೌನ್ ಮತ್ತು ಆರ್ಥಿಕತೆಯ ಲಾಕೌಟ್ ಹೊಂದುವುದು ಸಾಧ್ಯವಿಲ್ಲ. ಹೀಗಾಗಿ ಲಾಕ್ಡೌನ್ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರವು ಮರುವಿಮರ್ಶೆ ಮಾಡಬೇಕು ಎಂದು ಕಾಂಗ್ರೆಸ್ನ ಹಿರಿಯ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ.
ವಿಡಿಯೊ ಕಾನ್ಫರೆನ್ಸ್ ಮೂಲಕ ಪತ್ರಿಕಾಗೋಷ್ಠಿ ನಡೆಸಿದ ಅವರು, ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ನ್ಯಾಯ ವಿತರಣಾ ವ್ಯವಸ್ಥೆಯನ್ನು ಅಗತ್ಯ ಸೇವೆಯೆಂದು ಪರಿಗಣಿಸಲು ನ್ಯಾಯಾಂಗವು ನೀತಿ ರೂಪಿಸಬೇಕು ಎಂದೂ ಹೇಳಿದ್ದಾರೆ.
ಈ ಲಾಕ್ಡೌನ್ ಸಮಯದಲ್ಲಿ ವಾಸ್ತವ ಸ್ಥಿತಿಯ ಬಗ್ಗೆ ಅರಿವಿಲ್ಲದ ಅಧಿಕಾರಿಗಳು ಸರ್ಕಾರದ ನೀತಿಗಳನ್ನು ರೂಪಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.