ಬೆಂಗಳೂರು:ರೋಗಿಗಳ ತುರ್ತು ಸೇವೆಗೆ ಸಂಚಾರ ಮುಕ್ತಗೊಳಿಸುವ ದಿಸೆಯಲ್ಲಿ ಕಾಸರಗೋಡು ವ್ಯಾಪ್ತಿಯಲ್ಲಿ ಮುಚ್ಚಲಾಗಿರುವ ಕೇರಳದ ಗಡಿ ರಸ್ತೆ ತೆರವುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶಿಸಿದೆ.
ಕೇರಳ-ಕರ್ನಾಟಕ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ತೆರವುಗಿಳಿಸುವಂತೆ ನ್ಯಾಯಮೂರ್ತಿ ಎ.ಕೆ.ಜಯಶಂಕರನ್ ನಂಬಿಯಾರ್ ಹಾಗೂ ನ್ಯಾಯಮೂರ್ತಿ ಶಾಜಿ ಪಿ ಚಲಿ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ಆದೇಶಿಸಿದೆ.
ಭಾರತದ ಪ್ರಜೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಮುಕ್ತವಾಗಿ ಸಂಚರಿಸಲು ಸಂವಿಧಾನ ಅವಕಾಶ ಕಲ್ಪಿಸಿದೆ. ಆದ್ದರಿಂದ ಬೇರೆ ವಿಧಿಯಿಲ್ಲದೆ ಈ ಆದೇಶ ಹೊರಡಿಸಬೇಕಾಗಿದೆಎಂದು ನ್ಯಾಯಪೀಠ ಹೇಳಿದೆ.
ರಸ್ತೆ ಬಂದ್ ಮಾಡಿದ್ದನ್ನುಪ್ರಶ್ನಿಸಿ ಕೇರಳ ಹೈಕೋರ್ಟ್ ವಕೀಲರ ಸಂಘ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಕಾಸರಗೋಡಿನಿಂದ ಮಂಗಳೂರಿಗೆ ಚಿಕಿತ್ಸೆಗಾಗಿ ಬರುವವರನ್ನು ಮಾನವೀಯ ದೃಷ್ಟಿಯಿಂದ ನೋಡಬೇಕಾಗಿದೆ.
ಸಾಮಾನ್ಯ ಸಂಚಾರವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ ಚಿಕಿತ್ಸೆಗೆ ಬರುವವರಿಗೆ ಮಾತ್ರ ಎರಡು ರಾಜ್ಯಗಳ ನಡುವಿನ ಹೆದ್ದಾರಿಯನ್ನು ಮುಕ್ತಗೊಳಿಸಬೇಕು. ಕೊರೊನಾ ವಿರುದ್ಧದ ಹೋರಾಟ ಜಾತಿ, ಧರ್ಮ ಮತ್ತು ಗಡಿಯನ್ನು ಮೀರಿದ್ದು.