ನವದೆಹಲಿ : ‘ಸಾಮಾಜಿಕ ಜಾಲತಾಣ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕೆಂಬ ಮನವಿಗೆ ಸಂಬಂಧಿಸಿದಂತೆ ಬೇರೆಬೇರೆ ರಾಜ್ಯಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ಗೆ ವರ್ಗಾಯಿಸಬೇಕು’ ಎಂದು ಫೇಸ್ಬುಕ್ ಸಂಸ್ಥೆ ಮಾಡಿರುವ ಮನವಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿದೆ.
ನ್ಯಾಯಮೂರ್ತಿಗಳಾದ ದೀಪಕ್ ಗುಪ್ತ ಹಾಗೂ ಅನಿರುದ್ಧ ಬೋಸ್ ಅವರನ್ನೊಳಗೊಂಡ ಪೀಠವು ಕೇಂದ್ರ ಸರ್ಕಾರ, ಗೂಗಲ್, ಟ್ವಿಟರ್, ಯೂಟ್ಯೂಬ್ ಹಾಗೂ ಇತರ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದ್ದು, ಸೆಪ್ಟೆಂಬರ್ 13ರ ಒಳಗಾಗಿ ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ.
ಆಧಾರ್ ಜೋಡಣೆಗೆ ಸಂಬಂಧಿಸಿದಂತೆ ಪ್ರಸಕ್ತ ನಡೆಯುತ್ತಿರುವ ವಿಚಾರಣೆಯನ್ನು ಮುಂದುವರಿಸಬಹುದು. ಆದರೆ ಈ ಸಂಬಂಧ ಅಂತಿಮ ಆದೇಶವನ್ನು ನೀಡಬಾರದು ಎಂದು ಪೀಠವು ಮದ್ರಾಸ್ ಹೈಕೋರ್ಟ್ಗೆ ಸೂಚನೆ ನೀಡಿದೆ.