ಕವಿತಾಳ: ನೀರಿನ ಸಮಸ್ಯೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಇಲ್ಲಿನ 12 ಮತ್ತು 13ನೇ ವಾರ್ಡ್ನ ಮಹಿಳೆಯರು ಸೋಮವಾರ ಪಟ್ಟಣ ಪಂಚಾಯಿತಿ ಎದುರು ಖಾಲಿ ಕೊಡಗಳ ಪ್ರದರ್ಶಿಸಿ ಧರಣಿ ನಡೆಸಿದರು.
ಪಟ್ಟಣ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು, ‘ಕಳೆದ 15 ದಿನಗಳಿಂದ ನೀರು ಸರಬರಾಜು ಸಂಪೂರ್ಣ ಸ್ಥಗಿತವಾಗಿದ್ದು ಅಧಿಕಾರಿಗಳು ಗಮನ ಹರಿಸುತ್ತಿಲ್ಲ, ವಾರ್ಡ್ನಲ್ಲಿ ಪದೇ ಪದೇ ನೀರಿನ ಸಮಸ್ಯೆ ಉಂಟಾಗುತ್ತಿದೆ. ಪಟ್ಟಣ ಪಂಚಾಯಿತಿ ಆಗಿ ಮೇಲ್ಬರ್ಜೆಗೆ ಏರಿದ ನಂತರವೂ 4-5 ಬಾರಿ ಪಟ್ಟಣ ಪಂಚಾಯಿತಿ ಬಂದು ಸಮಸ್ಯೆ ಹೇಳಿಕೊಂಡರೂ ಪ್ರಯೋಜನವಾಗಿಲ್ಲ. ರಸ್ತೆಗಳು ಹಾಳಾಗಿದ್ದು, ಚರಂಡಿಗಳು ತುಂಬಿ ಹರಿಯುತ್ತಿವೆ. ಸ್ವಚ್ಛತೆ ಬಗ್ಗೆ ಭಾಷಣ ಬಿಗಿಯುವ ಅಧಿಕಾರಿಗಳು ಮೂಲ ಸೌಕರ್ಯ ಒದಗಿಸಿಲ್ಲ ಎಂದು ವಾರ್ಡ್ ನಿವಾಸಿ ಎಂ. ಸುಮಾ ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರಿಗಳು ಪಂಚಾಯಿತಿಯಲ್ಲಿ ಇರದ ಕಾರಣ ಬೀಗ ಹಾಕಿದ ಮಹಿಳೆಯರು ವಾಪಸ್ ತೆರಳಿದರು. ನಂತರ ಸ್ಥಳಕ್ಕೆ ಬಂದ ಮುಖ್ಯಾಧಿಕಾರಿ ಜೆ.ಟಿ.ರೆಡ್ಡಿ ಪಂಚಾಯಿತಿಗೆ ಬೀಗ ಹಾಕಿರುವ ಕುರಿತು ಪೊಲೀಸರಿಗೆ ಮಾಹಿತಿ ನೀಡಿದರು. ಸಬ್ ಇನ್ಸ್ಪೆಕ್ಟರ್ ವಿಶ್ವನಾಥ ಅವರು ವಾರ್ಡ್ನ ಮಹಿಳೆಯರನ್ನು ಕರೆಯಿಸಿ ಬೀಗ ತೆರವುಗೊಳಿಸಿದರು.
ಈ ವೇಳೆ ಮಾತನಾಡಿದ ಮುಖ್ಯಾಧಿ ಕಾರಿ ಜೆ.ಟಿ.ರೆಡ್ಡಿ, ‘ಕೊಳವೆಭಾವಿ ಯಂತ್ರ ಹಾಳಾಗಿದ್ದು, ಶೀಘ್ರ ದುರಸ್ತಿ ಮಾಡಿಸಿ ನೀರು ಸರಬರಾಜಿಗೆ ಕ್ರಮ ಕೈಗೊಳ್ಳಲಾಗುವುದು. ಬೀದಿ ದೀಪ ಅಳವಡಿಕೆ ಮತ್ತು ಚರಂಡಿ ಸ್ವಚ್ಛತೆಗೆ ಗಮನಹರಿಸಲಾಗುವುದು’ ಎಂದು ಭರವಸೆ ನೀಡಿದರು.