ಕೋಲ್ಕತ್ತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತೃತೀಯ ರಂಗದ ಶಿಲ್ಪಿ ಎಂದು ಮಂಗಳವಾರ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ವರ್ಣಿಸಿದ್ದಾರೆ.
ಕೋಲ್ಕತ್ತ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಅವರನ್ನು ಬಂಧಿಸಲು ಮುಂದಾದ ಸಿಬಿಐ ಪ್ರಯತ್ನ ಹಾಗೂ ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಮಮತಾ ಬ್ಯಾನರ್ಜಿ ’ಸೇವ್ ಇಂಡಿಯಾ’ ಹೆಸರಿನಲ್ಲಿ ಕೈಗೊಂಡಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ಚಂದ್ರಬಾಬು ನಾಯ್ಡು ಭಾಗಿಯಾಗಿ ಬೆಂಬಲ ವ್ಯಕ್ತಪಡಿಸಿದರು. ’ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಮಮತಾ ನೇತೃತ್ವದ ತೃಣಮೂಲ ಕಾಂಗ್ರೆಸ್ 42 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ’ ಎಂದು ವಿಶ್ವಾಸದ ಮಾತುಗಳನ್ನಾಡಿದರು.
ವಿರೋಧ ಪಕ್ಷಗಳ ಆಧಾರ ಸ್ತಂಭ ಹಾಗೂ ತೃತೀಯ ರಂಗದ ಶಿಲ್ಪಿ ಎಂದು ಮಮತಾ ಅವರನ್ನು ಬಣ್ಣಿಸಿದರು. ಪಶ್ಚಿಮ ಬಂಗಾಳದ ಎಲ್ಲ 42 ಸ್ಥಾನಗಳಲ್ಲಿ ಗೆಲುವು ಸಾಧಿಸಲಿರುವ ಮಮತಾ ಬ್ಯಾನರ್ಜಿ, ರಾಷ್ಟ್ರೀಯ ಮಟ್ಟದಲ್ಲಿ ನಿರ್ಣಯ ಕೈಗೊಳ್ಳುವ ಸ್ಥಾನದಲ್ಲಿರಲಿದ್ದಾರೆ ಎಂದು ಭವಿಷ್ಯ ನುಡಿದರು.
ಜನವರಿ 19ರಂದು ನಡೆದಿದ್ದ ವಿರೋಧ ಪಕ್ಷಗಳ ರ್ಯಾಲಿಯಲ್ಲಿ ಭಾಗಿಯಾಗಿದ್ದ 23 ಪಕ್ಷಗಳ ಪರವಾಗಿ ನಾನು ಇಲ್ಲಿಗೆ ಬಂದಿದ್ದೇನೆ ಎಂದು ನಾಯ್ಡು ಹೇಳಿದರು.